ಶಿವಮೊಗ್ಗ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾ. ಡಿಸೋಜ (87) ಅವರು ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಕುರಿತು ಅವರ ಪುತ್ರ ನವೀನ್ ಡಿಸೋಜ ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ನಿವಾಸಿಯಾದ ನಾ. ಡಿಸೋಜ ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಮಂಗಳೂರಿನ ಪಾಧರ್ ಮಿಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ ಸುಮಾರು 7:50 ರ ಸುಮಾರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ನಾ. ಡಿಸೋಜ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾಹ್ನ ಸಾಗರಕ್ಕೆ ತಂದು, ಅಲ್ಲಿನ ಗಾಂಧಿ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜನವರಿ 7 ರಂದು ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಾ. ಡಿಸೋಜ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಕೃಷಿ ಮಾಡಿದ್ದ ಇವರು ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರ ಪೂರ್ಣ ಹೆಸರು ನಾರ್ಬರ್ಟ್ ಡಿಸೋಜ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ 1937 ರ ಜೂನ್ 6 ರಂದು ಜನಿಸಿದ್ದರು.
ಕಾದಂಬರಿ ರಚನೆ:ಪರಿಸರ ಕಾಳಜಿಯುಳ್ಳ ಸಾಹಿತಿಯಾಗಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯ ಒಳಗೊಂಡಂತೆ ಎಲ್ಲಾ ಸಾಹಿತ್ಯ ಪ್ರಾಕಾರಗಳಲ್ಲೂ ಕೃಷಿ ನಡೆಸಿದ್ದಾರೆ. ಮೊದಲು ಇವರು ಪ್ರಪಂಚ ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜ ಅವರು 1964 ರಲ್ಲಿ ತಮ್ಮ ಮೊದಲ ಕಾದಂಬರಿ 'ಬಂಜೆ ಬೆಂಕಿ' ಪ್ರಕಟಿಸಿದರು. ನಂತರ ಮಂಜಿನ ಕಾನು, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಮಾನವ - ಹೀಗೆ ಸುಮಾರು 75 ಕಾದಂಬರಿಗಳನ್ನು ಬರೆದಿದ್ದಾರೆ. 6 ಚಾರಿತ್ರಿಕ ಕಾದಂಬರಿ, 25 ಮಕ್ಕಳ ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳು, ಸುಮಾರು 550 ಕಥೆಗಳು, ಹಲವು ನಾಟಕಗಳು, ರೇಡಿಯೋ ನಾಟಕಗಳು, ಅನೇಕ ಪತ್ರಿಕಾ ಲೇಖನಗಳನ್ನು ಬರೆದಿದ್ದಾರೆ. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ.. ಹೀಗೆ ಹತ್ತು ಹಲವು ವಿಷಯಗಳನ್ನೊಳಗೊಂಡ ಅವರ ಕಾದಂಬರಿಗಳು ಹೆಚ್ಚು ಜನಪ್ರಿಯವಾಗಿವೆ.
ಚಲನಚಿತ್ರವಾದ ಕಾದಂಬರಿಗಳು:ದ್ವೀಪ, ಮುಳುಗಡೆ, ಕಾಡಿನ ಬೆಂಕಿ, ಬಳುವಳಿ, ಬೆಟ್ಟದ ಪುರದ ದಿಟ್ಟ ಮಕ್ಕಳು, ಆಂತರ್ಯ ಕಾದಂಬರಿಗಳು ಚಲನಚಿತ್ರವಾಗಿವೆ. ಇದರಲ್ಲಿ ಗಿರೀಶ್ ಕಾರಸವಳ್ಳಿ ಅವರ ನಿರ್ದೇಶನದ ದ್ವೀಪ ರಾಷ್ಟ್ರೀಯ ಪ್ರಶಸ್ತಿ ಗಳಿಸಿದೆ. ಭಾರತದ ಖ್ಯಾತ ನಟಿ ಸೌಂದರ್ಯ ಅವರು ಈ ಚಿತ್ರದಲ್ಲಿ ನಟಿಸಿ ರಾಷ್ಟ್ರೀಯ ಉತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದರು.