ಬೆಂಗಳೂರು: ರಾಜ್ಯ ಸರ್ಕಾರದ ಜಾತ್ಯತೀತ ವ್ಯವಸ್ಥೆ ಮತ್ತು ಸಮುದಾಯಗಳ ನಡುವೆ ಗೊಂದಲ ಸೃಷ್ಟಿಸಿದ್ದ ಆರೋಪ ಎದುರಿಸುತ್ತಿದ್ದ ಮುಂಬೈನ ಥಾಣೆಯ ಪ್ರಾಧ್ಯಾಪಕ ವಿನಿತ್ ನಾರಾಯಣ ನಾಯಕ್ ಅವರ ವಿರುದ್ಧ ಮುಂದಿನ ವಿಚಾರಣೆಯವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ.
ವಿನಿತ್ ನಾರಾಯಣ ನಾಯಕ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಸೈಬರ್ ಅಪರಾಧ ಪ್ರಕರಣ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೆಟ್ ಜನರಲ್ ಶಶಿಕಿರಣ ಶೆಟ್ಟಿ, ರಾಜ್ಯದಲ್ಲಿ ಜಾತ್ಯತೀತ ವ್ಯವಸ್ಥೆಯನ್ನು ಬಲಿಷ್ಟಗೊಳಿಸಲು ಯಾವುದೇ ಧಕ್ಕೆಯಾಗದಂತೆ ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸುತ್ತಿದೆ. ಅರ್ಜಿದಾರರು ಸಮುದಾಯಗಳ ನಡುವೆ ದ್ವೇಷ ಬಿತ್ತುವ ರೀತಿಯಲ್ಲಿ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದರು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಅರ್ಜಿದಾರರು ಯಾವುದೇ ಸ್ವಯಂ ಹೇಳಿಕೆಯನ್ನು ನೀಡಿಲ್ಲ. ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದ ಹೇಳಿಕೆಗೆ ಪ್ರತಿಯಾಗಿ ಟ್ವೀಟ್ ಮಾಡಿದ್ದಾರೆ ಅಷ್ಟೇ. ಇದೆಲ್ಲವೂ ಟಿ.ವಿ.ಚಾನೆಲ್ಗಳಲ್ಲಿ ಅದಾಗಲೇ ವಿಸ್ತೃತವಾಗಿ ಬಿತ್ತರಗೊಂಡಿದೆ ಎಂದು ತಿಳಿಸಿದರು.