ಹುಬ್ಬಳ್ಳಿ:ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ಫೆಬ್ರವರಿ 26ರಿಂದ ಫೆಬ್ರವರಿ 28ರವರೆಗೆ ಮೂರು ದಿನಗಳ ಕಾಲ 'ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) - 2025'ನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, "ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಉದ್ಘಾಟಿಸಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವೂ ಪಾಲ್ಗೊಳ್ಳಲಿದೆ" ಎಂದರು.
"ಫೆಬ್ರವರಿ 27 ಮತ್ತು 28ರಂದು ತುಮಕೂರು ರಸ್ತೆಯ ಮಾದಾವರದಲ್ಲಿನ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ನಲ್ಲಿ ಸಮಾವೇಶ ನಡೆಯಲಿದೆ. ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ" ಎಂದು ತಿಳಿಸಿದರು.
"ಪ್ರತಿವರ್ಷ ರಾಜ್ಯಕ್ಕೆ 1 ಕೋಟಿ 25 ಲಕ್ಷಕ್ಕೂ ಅಧಿಕ ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿವೆ. ಇದರಲ್ಲಿ 800ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಮಾಡಲಾಗಿದೆ. ಇವುಗಳನ್ನು ಬೆಳಕಿಗೆ ತರುವ ಕೆಲಸ ಮಾಡಲಾಗುವುದು. ಈ ಮೂಲಕ ಮುಂದಿನ ಪೀಳಿಗೆಗೆ ಇವುಗಳ ಮಹತ್ವ ತಿಳಿಸಲಾಗುವುದು" ಎಂದರು.