ಕರ್ನಾಟಕ

karnataka

ನಾಳೆ - ನಾಡಿದ್ದು BMTC- BWSSB ಹುದ್ದೆಗೆ ಪರೀಕ್ಷೆ; ಅಕ್ರಮ ತಡೆಗೆ ಕ್ಯಾಮೆರಾ ಕಣ್ಗಾವಲು - KEA conducting BMTC BWSSB Exam

By ETV Bharat Karnataka Team

Published : Jul 12, 2024, 5:22 PM IST

ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ.

kea-conducting-bmtc-bwssb-exam-under-camera-surveillance-for-the-first-time
ಸಾಂದರ್ಭಿಕ ಚಿತ್ರ (ಸಂಗ್ರಹ ಚಿತ್ರ)

ಬೆಂಗಳೂರು: ಬಿಎಂಟಿಸಿ (ಕಲ್ಯಾಣ ಕರ್ನಾಟಕ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ಶನಿವಾರ ಮತ್ತು ಭಾನುವಾರ (ಜುಲೈ 13, 14) ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಅಕ್ರಮ ತಡೆಯುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಕ್ಯಾಮರಾ ಕಣ್ಗಾವಲಿಯಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವ್ಯಾಪಕ ಸಿದ್ಧತೆ ನಡೆಸಿದೆ

ʼಬೆಂಗಳೂರು, ಕಲ್ಬುರ್ಗಿ, ಧಾರವಾಡ ಮತ್ತು ಬಳ್ಳಾರಿ ನಗರಗಳ ಒಟ್ಟು 22 ಕೇಂದ್ರಗಳ, 377 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮೆರಾ ಅಳವಡಿಸಿದ್ದು, ವೆಬ್ ಕ್ಯಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆʼ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಉನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅವರು ಶನಿವಾರ ಖುದ್ದು ಈ ಪ್ರಕ್ರಿಯೆಯನ್ನು ವೀಕ್ಷಿಸಲು ಕೆಇಎಗೆ ಬರಲಿದ್ದಾರೆ ಎಂದು ವಿವರಿಸಿದರು.

ಅಕ್ರಮ ತಡೆಗೆ ಕ್ರಮ: ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಇಲ್ಲಿ ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ.ಇದಕ್ಕಾಗಿ ಮೇಲ್ವಿಚಾರಣೆಗೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಆಗಲಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಳ್ಳಲಾಗುವುದು. ಈ ಮೂಲಕ ಅವರು ಹುದ್ದೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಫೋಟೋದ ಜೊತೆಗೆ ಅಭ್ಯರ್ಥಿಯ ಚಹರೆಯನ್ನು ಆನ್ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಅಭ್ಯರ್ಥಿ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು.

ಇತ್ತೀಚೆಗೆ ಡಿಸಿಇಟಿ ಪ್ರಾಂಶುಪಾಲರ ಕಚೇರಿಯಲ್ಲಿನ ಬೆಳವಣಿಗೆಗಳನ್ನು ವೆಬ್ ಕಾಸ್ಟಿಂಗ್ ಮಾಡಲಾಗಿತ್ತು. ಇದು ಯಶಸ್ವಿಯಾಗಿದ್ದು, ಇದೀಗ ಪರೀಕ್ಷೆ ನಡೆಯುವ ಕೊಠಡಿಯಿಂದಲೂ ವೆಬ್ ಕಾಸ್ಟಿಂಗ್ ಮಾಡಲು ತೀರ್ಮಾನಿಸಲಾಗಿದೆ. ಕಲ್ಬುರ್ಗಿ, ಧಾರವಾಡ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿಯೂ ಒಂದೊಂದು ಉಪ ಕಮಾಂಡಿಂಗ್ ಸೆಂಟರ್ ಇದ್ದು, ಅಲ್ಲಿಯೂ ಮೇಲ್ವಿಚಾರಣೆ ನಡೆಸಲಾಗುತ್ತದೆ.

ಇದೇ ಮೊದಲ ಬಾರಿಗೆ ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ:ಆನ್​ಲೈನ್ ಗೇಮಿಂಗ್​ಗೆ ಪ್ರಾಣ ಕಳೆದುಕೊಳ್ಳಬೇಡಿ: ಯುವಕರಿಗೆ ಪೊಲೀಸ್ ಕಮೀಷನರ್ ಶಶಿಕುಮಾರ್​​ ಕರೆ

ABOUT THE AUTHOR

...view details