ಚಿಕ್ಕೋಡಿ: "ಇನ್ನು ಎರಡು ದಿನದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಇಂದು ನಡೆದ ಅಮ್ಮಜೇಶ್ವರಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
"ಎರಡು ದಿನದಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಇದರಲ್ಲಿ ಬೆಳಗಾವಿ ಚಿಕ್ಕೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ನಿಮ್ಮ ಕೆಲಸ ಮಾಡಿದ್ದೇವೆ. ನಮಗೆ ಕೂಲಿ ಕೊಡಿ. ಕೂಲಿ ರೂಪದಲ್ಲಿ ಮತ ನೀಡಿ, ಜಿಲ್ಲೆಯ ಎರಡು ಅಭ್ಯರ್ಥಿಗಳನ್ನು ಗೆಲ್ಲಿಸಿ" ಎಂದು ಸಿಎಂ ಜನರಿಗೆ ಮನವಿ ಸಲ್ಲಿಸಿದರು.
"ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಹೆಚ್ಚು ಜನರು ಭೇಟಿ ನೀಡುತ್ತಿದ್ದಾರೆ. ಎಲ್ಲಾ ಸಮುದಾಯದ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಕೊಡುತ್ತೇವೆ. ಲಕ್ಷ್ಮಣ್ ಸವದಿ ಒಳ್ಳೆಯ ರಾಜಕಾರಣಿ. ಅವರಿಗೆ ಮುಂದಿನ ದಿನದಲ್ಲಿ ಭವಿಷ್ಯ ಇದೆ. ಸವದಿ ಮಂತ್ರಿಸ್ಥಾನ ಕೇಳಲಿಲ್ಲ. ನೀರಾವರಿ ಯೋಜನೆ ಕೊಡುವಂತೆ ಕೇಳಿದರು. ಅಮ್ಮಜೇಶ್ವರಿ ಏತ ನೀರಾವರಿ ಯೋಜನೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಯಾಗಿತ್ತು. ಈ ಯೋಜನೆಗೆ 1,486 ಕೋಟಿ ರೂಪಾಯಿ ಖರ್ಚಾಗುತ್ತದೆ. ಈ ಭಾಗದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಈ ಯೋಜನೆ ಕಲ್ಪಿಸುತ್ತದೆ." ಎಂದು ಹೇಳಿದರು.
"ಈ ಯೋಜನೆಯಿಂದ ಅಥಣಿ ತಾಲೂಕಿಗೆ 95 ಶೇಕಡಾ ನೀರಾವರಿ ಸೌಲಭ್ಯ ಹೊಂದಿದಂತಾಗುತ್ತದೆ. ಈ ಯೋಜನೆಯಿಂದ ಕೆರೆಗಳನ್ನು ತುಂಬಿಸಲಾಗುವದು. ಇದರಿಂದ ಅಂತರ್ಜಲ ಅಭಿವೃದ್ಧಿಯಾಗುತ್ತದೆ. ಕೆರೆಗಳನ್ನು ತುಂಬುವುದಕ್ಕೆ ಸರ್ಕಾರ ನಾಲ್ಕು ಸಾವಿರ ಕೋಟಿ ಖರ್ಚು ಮಾಡಿದೆ. ನೀರಾವರಿಗಾಗಿ ನಾವು ಪಾದಯಾತ್ರೆ ನಡೆಸಿದ್ದೆವು. ನೀರಾವರಿಗೋಸ್ಕರ 56 ಸಾವಿರ ಕೋಟಿ ರೂ. ಖರ್ಚು ಮಾಡುವ ಗುರಿ ಹೊಂದಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆ ಮುಖಾಂತರ ಹಲವು ಭಾಗಗಳಿಗೆ ನೀರು ಕೊಡಬಹುದು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಅದಕ್ಕೆ ಅನುಮತಿ ಕೊಟ್ಟಿಲ್ಲ." ಎಂದು ಆರೋಪಿಸಿದರು.