ಕರ್ನಾಟಕ

karnataka

ETV Bharat / state

ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

By ETV Bharat Karnataka Team

Published : 4 hours ago

ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ಎಂ. ಲಕ್ಷ್ಮಣ್​ ದೂರು
ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ಎಂ.ಲಕ್ಷ್ಮಣ್​ ದೂರು (ETV Bharat)

ಮೈಸೂರು: ಸಾಮಾಜಿಕ ಹೋರಾಟಗಾರ ಹಾಗೂ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್, "ಘನ ನ್ಯಾಯಾಲಯದ ಆದೇಶದ ಪ್ರಕಾರ ಮೈಸೂರಿನ ಲೋಕಾಯುಕ್ತ ಅಧಿಕಾರಿಗಳು ಸಿಎಂ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಲೋಕಾಯುಕ್ತ ತನಿಖೆ ನಡೆಸಿ ಅಂತಿಮ ವರದಿ ನೀಡುತ್ತದೆ. ಆದರೆ ದೂರುದಾರ ಸ್ನೇಹಮಹಿ ಕೃಷ್ಣ ದಿನನಿತ್ಯ ಲೋಕಾಯುಕ್ತ ಕಚೇರಿ ಬಳಿ ಬಂದು ಮುಖ್ಯಮಂತ್ರಿಗಳು ಸಾಕ್ಷ್ಯನಾಶ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳ ಎದುರು ಆರೋಪ ಮಾಡುತ್ತಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ (ETV Bharat)

"ನಾನು ದಿನನಿತ್ಯ ಲೋಕಾಯುಕ್ತ ಕಚೇರಿಗೆ ಬರುತ್ತೇನೆ ಎಂದು ಸುಳ್ಳು ದೂರು ನೀಡಿದ್ದಾರೆ. ಅದಕ್ಕಾಗಿ ನಾವು ಅವರ ವಿರುದ್ಧ ಒಂದು ದೂರು ನೀಡಿದ್ದೇವೆ. ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮೂಲಕ ಹೇಳಿಕೆ ನೀಡುತ್ತಾ ಲೋಕಾಯುಕ್ತ ಪೊಲೀಸರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನವರು ಸ್ನೇಹಮಯಿ ಕೃಷ್ಣ ಅವರ ಸಹಾಯದಿಂದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ದೂರು ನೀಡಿದ್ದೇವೆ, ದಯಮಾಡಿ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು" ಎಂದು ಆಗ್ರಹಿಸಿದರು.

"ಸ್ನೇಹಮಯಿ ಕೃಷ್ಣನನ್ನು ಕೂಡಲೇ ಬಂಧಿಸಿ ತನಿಖೆ ಮುಗಿಯುವವರೆಗೂ ಬಿಡಬಾರದು. ನಮಗಿರುವ ಮಾಹಿತಿ ಪ್ರಕಾರ ಅವರು ಫೇಕ್ ಸೀಲ್‌ಗಳನ್ನು ಬಳಸಿ ದಾಖಲಾತಿಗಳನ್ನು ಸೃಷ್ಟಿಸಿ ಲೋಕಾಯುಕ್ತ ಕಚೇರಿಗೆ ಸಲ್ಲಿಸುತ್ತಿದ್ದಾರೆ. ಅವರಿಗೆ ಸಮನ್ಸ್ ನೀಡಿದ ದಿನ ಮಾತ್ರ ಕಚೇರಿಗೆ ಬರಬೇಕು. ಸುಳ್ಳು ದಾಖಲೆಗಳು ಮತ್ತು ತಪ್ಪು ಹೇಳಿಕೆಗಳ ಮೂಲಕ ಇಲ್ಲಸಲ್ಲದ ಆರೋಪಗಳನ್ನು ಮುಖ್ಯಮಂತ್ರಿಗಳ ಮೇಲೆ ಮಾಡುತ್ತಿದ್ದಾರೆ" ಎಂದು ದೂರಿದರು.

"ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಅದು ಯಾವ ಸರ್ಕಾರದ ಅಡಿಯಲ್ಲೂ ಬರುವುದಿಲ್ಲ. ಅಲ್ಲಿರುವ ಸಿಬ್ಬಂದಿಗಳಿಗೆ ಸಂಬಳ ಕೊಡುವುದು ಕರ್ನಾಟಕ ರಾಜ್ಯ ಸರ್ಕಾರ ಅಷ್ಟೇ. ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ಕೂಡ ಲೋಕಾಯುಕ್ತ ಸಂಸ್ಥೆಯ ಮೇಲೆ ಒತ್ತಡ ಹೇರಿಲ್ಲ. ಸಮ್ಮನೆ ಸುಳ್ಳು ಆರೋಪಗಳನ್ನು ಮಾಡಿ ಒತ್ತಡ ಹಾಕುವ ಕೆಲಸ ನಡೆಯುತ್ತಿದೆ. ತನಿಖೆ ಪಾರದರ್ಶಕವಾಗಿ ನಡೆಯಲಿ. ಪಾರದರ್ಶಕತೆ ಇಲ್ಲ ಎಂದರೆ ನ್ಯಾಯಾಲಯದ ಮೊರೆ ಹೋಗುವ ಅವಕಾಶ ಇದೆ. ಅದು ಬಿಟ್ಟು ಪ್ರತಿನಿತ್ಯ ಮಾಧ್ಯಮಗಳ ಮುಂದೆ ಸುಳ್ಳು ಆರೋಪಗಳನ್ನು ಮಾಡುವುದಲ್ಲ" ಎಂದು ಸ್ನೇಹಮಯಿ ಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಲೋಕಾಯುಕ್ತ ಪೊಲೀಸರು ಸ್ನೇಹಮಯಿ ಕೃಷ್ಣನನ್ನು ಬಂಧಿಸಲಿ: ಎಂ.ಲಕ್ಷ್ಮಣ್‌

ABOUT THE AUTHOR

...view details