ಕರ್ನಾಟಕ

karnataka

ETV Bharat / state

ಮಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟಿಸಿದ ಕೋರ್ಟ್​​

ಯುವತಿ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಅರಿತು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದಿದ್ದವ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕೋರ್ಟ್​​ 10 ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Mangaluru District Court gives 10 years rigorous punishment to rape accused
ಮಂಗಳೂರು ಜಿಲ್ಲಾ ನ್ಯಾಯಾಲಯ (ಈಟಿವಿ ಭಾರತ್​)

By ETV Bharat Karnataka Team

Published : 5 hours ago

ಮಂಗಳೂರು: ಯುವತಿಯನ್ನು ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ್ ಕೆ. ಮೊಗೇರ (38) ಶಿಕ್ಷೆಗೊಳಗಾದ ಅಪರಾಧಿ. 2016ರ ಫೆ 25ರಂದು ಈತ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಏನಿದು ಘಟನೆ?: ಯುವತಿ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಅರಿತು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದಿದ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದ. ಅನಂತರವೂ ಬೆದರಿಕೆ ಹಾಕಿ ಹಲವು ಬಾರಿ ಅತ್ಯಾಚಾರವೆಸಗಿದ್ದ. ಯುವತಿ ಗರ್ಭಿಣಿಯಾದಾಗ ಮನೆಯವರಿಗೆ ವಿಚಾರ ತಿಳಿದು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ವೃತ್ತ ನಿರೀಕ್ಷಕ ಅನಿಲ್ ಎಸ್. ಕುಲಕರ್ಣಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆಯ ವೇಳೆ 9 ಮಂದಿ ಸಾಕ್ಷಿದಾರರನ್ನು ವಿಚಾರಿಸಿ 20 ದಾಖಲೆಗಳನ್ನು ಗುರುತಿಸಲಾಗಿತ್ತು. ಆರೋಪಿಯ ಕೃತ್ಯ ಸಾಬೀತಾಗಿರುವುದನ್ನು ತೀರ್ಮಾನಿಸಿದ ನ್ಯಾಯಾಧೀಶರು 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು 5,000 ರೂ. ದಂಡ, ಕಲಂ 506ರಡಿ 5 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 2 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಅವರು ವಾದಿಸಿದ್ದರು.

ಇದನ್ನೂ ಓದಿ: ಪ್ರಿಯಕರನ ಮೂಲಕ ಪತಿಯ ಹತ್ಯೆ: ದೂರಿನ ನಾಟಕವಾಡಿದ್ದ ಮಹಿಳೆ ಸಹಿತ ಐವರ ಬಂಧನ

ABOUT THE AUTHOR

...view details