ಕರ್ನಾಟಕ

karnataka

ETV Bharat / state

ಮಮದಾಪುರ ಕಾನನಕ್ಕೆ 'ಶ್ರೀ ಸಿದ್ದೇಶ್ವರಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣ' ಮರುನಾಮಕರಣ

ಮಮದಾಪುರದ ಅಧಿಸೂಚಿತ ಅರಣ್ಯ ಎಲೆ ಉದುರುವ ಕಾಡು ಮತ್ತು ಕುರುಚಲು ಕಾಡುಗಳಿಂದ ಕೂಡಿದ ಪ್ರದೇಶವಾಗಿದ್ದು, ಈ ಕಾನನಕ್ಕೆ 'ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ' ಎಂದು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ.

By ETV Bharat Karnataka Team

Published : 6 hours ago

RENAMING OF MAMDAPUR FOREST AREA
(ಎಡದಿಂದ) ಸಚಿವ ಈಶ್ವರ್ ಖಂಡ್ರೆ, ಶ್ರೀ ಸಿದ್ದೇಶ್ವರಸ್ವಾಮಿ (ETV Bharat)

ಬೆಂಗಳೂರು:ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದ 1,494 ಎಕರೆ 38 ಗುಂಟೆ ಅರಣ್ಯ ಪ್ರದೇಶಕ್ಕೆ 'ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ' ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲಾಗುವುದು ಎಂದರು.

ವಿವಿಧ ಕಾಲಾವಧಿಯಲ್ಲಿ ಮಮದಾಪುರ ಭಾಗದಲ್ಲಿನ ಅರಣ್ಯ ಪ್ರದೇಶಗಳ ಅಧಿಸೂಚನೆಯಾಗಿದ್ದು, ಪ್ರಸ್ತುತ ಸುಮಾರು 1,494 ಎಕರೆ 38 ಗುಂಟೆ ವಿಸ್ತೀರ್ಣದ ಅರಣ್ಯವಿದೆ. ಪ್ರಾಣಿಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಮತ್ತು ಸಸ್ಯಸಂಕುಲದಿಂದ ಕೂಡಿರುವ ಶ್ರೀಮಂತ ಜೀವವೈವಿಧ್ಯತೆಯ ಈ ತಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವೀಧ್ಯ ಪಾರಂಪರಿಕ ತಾಣ ಎಂದು ಜೀವವೈವಿಧ್ಯ ಕಾಯಿದೆ 2022ರ ಸೆಕ್ಷನ್ 37ರನ್ವಯ ಮರು ನಾಮಕರಣ ಮಾಡಲಾಗುತ್ತಿದೆ ಎಂದು ಹೇಳಿದರು.

ಮಮದಾಪುರದ ಅಧಿಸೂಚಿತ ಅರಣ್ಯ ಎಲೆ ಉದುರುವ ಕಾಡು ಮತ್ತು ಕುರುಚಲು ಕಾಡುಗಳಿಂದ ಕೂಡಿದ ಪ್ರದೇಶವಾಗಿದ್ದು, ಚಿರತೆಗಳು, ನರಿಗಳು, ಕತ್ತೆ ಕಿರುಬಗಳು ಮತ್ತು ಹಲವಾರು ಪ್ರಭೇದದ ಪಕ್ಷಿಗಳ ತಾಣವಾಗಿದೆ. ಸಸ್ಯ ಸಂಕುಲ, ಕೀಟ ಸಂಕುಲದ ನೆಲೆವೀಡೂ ಆಗಿದೆ.

ವಿಜಯಪುರ, ಬಾಗಲಕೋಟೆ ಭಾಗದಲ್ಲಿ ಅರಣ್ಯ ಪ್ರದೇಶವೇ ಕಡಿಮೆ ಇದ್ದು, ಇರುವ ವನಪ್ರದೇಶವನ್ನು ಮತ್ತು ಇಲ್ಲಿನ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಇಂದಿನ ಅಗತ್ಯ. ಈ ನಿಟ್ಟಿನಲ್ಲಿ ಸಿದ್ಧೇಶ್ವರ ಶ್ರೀಗಳ ಹೆಸರನ್ನು ಈ ಕಾನನ ಪ್ರದೇಶಕ್ಕೆ ಇಡುವುದರಿಂದ ಜನರಲ್ಲಿ ಪರಿಸರ ಜಾಗೃತಿ ಮೂಡಿಸಲೂ ನೆರವಾಗಲಿದೆ ಎಂದು ತಿಳಿಸಿದರು.

ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಈ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಹೇಳಿದ ಅವರು, ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರು ಸಂಪೂರ್ಣ ಪಾಲ್ಗೊಳ್ಳಲು ನೆರವಾಗುತ್ತದೆ ಎಂದೂ ಹೇಳಿದರು. ಆದರೆ, ಜೀವವೈವಿಧ್ಯತೆಯ ಸಂರಕ್ಷಣೆಗೆ ಬಾಧಕವಾಗುವ ಯಾವುದೇ ಚಟುವಟಿಕೆಗಳನ್ನು ಅನುಮತಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಯಲಹಂಕ ಬಳಿ 153 ಎಕರೆ ಅರಣ್ಯ ಭೂಮಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ: ಸಚಿವ ಖಂಡ್ರೆ

ABOUT THE AUTHOR

...view details