ಕರ್ನಾಟಕ

karnataka

By ETV Bharat Karnataka Team

Published : Mar 13, 2024, 10:42 PM IST

ETV Bharat / state

ಸಿಎಎ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಚಿವ ಪರಮೇಶ್ವರ್

ಸಿಎಎ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಹಾಗೂ ಸಂಪುಟದ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೇ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

minister-g-parameshwar-reaction-on-citizenship-amendment-act
ಸಿಎಎ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಸಂಪುಟ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಬಹುದೇ ಅಥವಾ ತಿರಸ್ಕರಿಸಬೇಕೆ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಎ ಬಗ್ಗೆ ಇದುವರೆಗೂ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೇ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿ, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ, ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ತಿಳಿಸಿದರು.

ಖರ್ಗೆ ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದರೆ ಪಕ್ಷಕ್ಕೆ ಹೆಚ್ಚಿನ ಬಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ. ಖರ್ಗೆಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸ್ಪರ್ಧೆಯ ಬಗ್ಗೆ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಇದರಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅವರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅವರ ಜೊತೆಯಲ್ಲಿರುತ್ತೇವೆ ಎಂದರು.

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್​ಗೆ ಅಭ್ಯರ್ಥಿಗಳ ಕೊರತೆಯೇನೂ ಇಲ್ಲ. ಸಂಭಾವ್ಯ ಅಭ್ಯರ್ಥಿಗಳ ನಡುವೆ ಪೈಪೋಟಿ ಹೆಚ್ಚಿರುವುದರಿಂದ ತೀರ್ಮಾನಿಸುವುದಕ್ಕೆ ತಡವಾಗುತ್ತಿದೆ. ಅಭ್ಯರ್ಥಿಗಳ ಹೆಸರು ಸ್ಕ್ರೀನಿಂಗ್ ಸಮಿತಿಯ ಮುಂದಿದೆ‌. ಸಮಿತಿಯ ಸದಸ್ಯರು ಗೆಲ್ಲಬಹುದಾದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಿದರು.

ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದ ಗಲಭೆ ಸಂಬಂಧ 42 ಮಂದಿ ಬಂಧನ: ಬ್ಯಾಡಗಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ 42 ಮಂದಿಯನ್ನು ಬಂಧಿಸಲಾಗಿದೆ. ಸಿಸಿಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಕೆಲವರು ಆಂಧ್ರಪ್ರದೇಶಕ್ಕೆ ಓಡಿ ಹೋಗಿದ್ದಾರೆ. ಕೆಲವರು ಆಂಧ್ರದಿಂದಲೇ ಬಂದಿರುವ ಮಾಹಿತಿ ಇದೆ. ಮೆಣಸಿನಕಾಯಿ ಬೆಲೆ ಕುಸಿತದಿಂದಾಗಿ ಸಿಟ್ಟಾದ ರೈತರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಗಲಭೆಯ ಹಿಂದೆ ವ್ಯವಸ್ಥಿತ ಪಿತೂರಿ ಇದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಬಂಧಿತರ ಪೈಕಿ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸುತ್ತಿದ್ದು, ಗಲಾಟೆಯಲ್ಲಿ ಅವರ ಪಾತ್ರ ಏನು ಎಂಬುದನ್ನು ಪತ್ತೆ ಹಚ್ಚುವ ಕೆಲಸವಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಬೋರ್ಡ್ ಪರೀಕ್ಷೆ: ಸರ್ಕಾರದ ಸಮರ್ಥನೆ

ABOUT THE AUTHOR

...view details