ಕರ್ನಾಟಕ

karnataka

ETV Bharat / state

ಯುವ ಸಮುದಾಯ ಹಾದಿ ತಪ್ಪಿದರೆ ದೇಶಕ್ಕೆ ಮಾರಕ, ಮಾದಕ ವ್ಯಸನ ಆಧುನಿಕ ಪಿಡುಗು: ಸಚಿವ ಪರಮೇಶ್ವರ್​ - G Parameshwar - G PARAMESHWAR

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಕಳೆದ ವರ್ಷ 40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ ಎಂದು ತಿಳಿಸಿದರು.

ಸಚಿವ ಪರಮೇಶ್ವರ್​
ಸಚಿವ ಪರಮೇಶ್ವರ್​ (ETV Bharat)

By ETV Bharat Karnataka Team

Published : Jun 26, 2024, 4:18 PM IST

Updated : Jun 26, 2024, 4:52 PM IST

ಸಚಿವ ಪರಮೇಶ್ವರ್​ (ETV Bharat)

ಬೆಂಗಳೂರು: "ಯುವ ಸಮುದಾಯವನ್ನು ಹಾಳು ಮಾಡುತ್ತಿರುವ ಮಾದಕ ದ್ರವ್ಯ ವಿಶ್ವಕ್ಕೆ ಆಧುನಿಕ ಪಿಡುಗು" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು. ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆ, ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

"ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆ 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂನ್ 26ರಂದು ಆಚರಿಸಲು ನಿರ್ಣಯಿಸಿತು. ಮಾದಕ ಪದಾರ್ಥಗಳು ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ. ಭಾರತವು ಸಹ ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕಿದ್ದು, 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ'' ಎಂದು ಕಳವಳ ವ್ಯಕ್ತಪಡಿಸಿದರು.

"ಹತ್ಯೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17ರಿಂದ 20 ವರ್ಷದೊಳಗಿನವರೆ ಹೆಚ್ಚು ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿರುವುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಅವರು ತಿಳಿಸಿದರು.

40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: "ರಾಜ್ಯ ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದ್ದು, ಸಂಪೂರ್ಣವಾಗಿ ಮಾದಕ ಪದಾರ್ಥಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಸಮರವನ್ನೇ ಸಾರಿದೆ. ಕಳೆದ ವರ್ಷ 40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂಬ ಆತಂಕವನ್ನು ವ್ಯಕ್ತಪಡಿಸಿದರು‌. ಅಲ್ಲದೆ ಪ್ರತಿಯೊಬ್ಬರು ಡ್ರಗ್ಸ್‌ನಿಂದ ದೂರ ಇರುತ್ತೇವೆ ಎಂದು ಸಂಕಲ್ಪ ಮಾಡಿಕೊಳ್ಳಬೇಕು. ಐಟಿ‌ ಕಂಪನಿಗಳು, ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಕೋರಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಐಡಿ ವಿಭಾಗದ ಡಿಜಿಪಿ ಡಾ.ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೋಹಂತಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ಆದರ್ಶ ಡೆವಲೆಪರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ವರ್ಷ ಕಳೆದರೂ ಡಿಪಿಆರ್ ಆಗದ್ದಕ್ಕೆ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆ - CM Siddaramaiah

Last Updated : Jun 26, 2024, 4:52 PM IST

ABOUT THE AUTHOR

...view details