ಕರ್ನಾಟಕ

karnataka

ETV Bharat / state

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ವಿಚಾರ: 5 ಸ್ಥಳ ಗುರುತು, ವಾರದಲ್ಲಿ ಆಖೈರು- ಎಂ.ಬಿ.ಪಾಟೀಲ್

ಬೆಂಗಳೂರಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯ. ಇದಕ್ಕಾಗಿ ಸರ್ಕಾರವು ಐದು ಸ್ಥಳಗಳನ್ನು ಗುರುತಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್​ ತಿಳಿಸಿದ್ದಾರೆ.

By ETV Bharat Karnataka Team

Published : 4 hours ago

ವಿಧಾನಸೌಧದಲ್ಲಿ ನಡೆದ ಸಭೆ
ವಿಧಾನಸೌಧದಲ್ಲಿ ನಡೆದ ಸಭೆ (ETV Bharat)

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರ್ಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಪಾಟೀಲ್, ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ದಾಬಸ್‌ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಆಖೈರುಗೊಳಿಸಲಾಗುವುದು ಎಂದು ವಿವರಿಸಿದರು.

ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರ್ಕಾರದ ಗುರಿಯಾಗಿದೆ. ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸಭೆ (ETV Bharat)

ಮೆಟ್ರೋ ಕೇಳಿರುವ ಜಾಗ ನಮ್ಮದಲ್ಲ: ಮೆಟ್ರೋ ರೈಲು ಸಂಸ್ಥೆಯವರು (ಬಿಎಂಆರ್​ಸಿಎಲ್​) ಹೆಬ್ಬಾಳದ ಬಳಿ ಬಹು ಮಾದರಿ ಸಾರಿಗೆ ಜಂಕ್ಷನ್ ರೂಪಿಸಲು 45 ಎಕರೆ ಜಾಗ ಕೇಳಿದ್ದಾರೆ. ಆದರೆ, ಆ ಜಾಗ ಕೆಐಎಡಿಬಿ ವಶದಲ್ಲಿಲ್ಲ. ಅದನ್ನು 2001ರಲ್ಲಿಯೇ `ಸಿಂಗಲ್ ಯೂನಿಟ್ ಕಾಂಪ್ಲೆಕ್ಸ್’ ಪರಿಕಲ್ಪನೆಯಡಿ ಖಾಸಗಿ ಸಂಸ್ಥೆಗೆ ಸ್ವಾಧೀನ ಪಡಿಸಿ ಕೊಡಲಾಗಿದೆ. ಆದ್ದರಿಂದ ಮೆಟ್ರೋ ನಿಗಮಕ್ಕೆ ಆ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲು ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆ ಬರಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಆದರೆ, ಮೆಟ್ರೋದವರು ಕೇಳಿರುವ ಜಾಗ ಖಾಸಗಿಯವರ ಸ್ವತ್ತಾಗಿದೆ. ಇದರಲ್ಲಿ ಕೆಐಎಡಿಬಿ ಪಾತ್ರವೇನೂ ಇಲ್ಲ. ಬಹುಮಾದರಿ ಸಾರಿಗೆ ಸಂಕೀರ್ಣವು ಒಂದೇ ಕಡೆ ಬಂದರೆ ಜನರಿಗೂ ಅನುಕೂಲವಾಗಲಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗುವ ಸಂಭವವಿದೆ ಎಂದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ:ಪೀಕ್ ಅವರ್​ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾರ್ಪಾಡು: ಶೇ.24ರಷ್ಟು ಕಡಿಮೆಯಾಯ್ತು ಟ್ರಾಫಿಕ್ ಜಾಮ್

ABOUT THE AUTHOR

...view details