ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಮನೆ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನಸಭೆಯಲ್ಲಿ ಇಂದು ಶಾಸಕರು ಪಕ್ಷಬೇಧ ಮರೆತು ಆಗ್ರಹಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ದೊಡ್ಡ ಬಳ್ಳಾಪುರ ಕ್ಷೇತ್ರದ ಬಿಜೆಪಿ ಶಾಸಕ ಧೀರಜ್ ಮುನಿರಾಜು, "ನನ್ನ ಕ್ಷೇತ್ರದಲ್ಲಿ ಹಳ್ಳಿ ಹಳ್ಳಿಯಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ನನ್ನ ಹುಟ್ಟೂರಿನ ಬೂತ್ ವಡ್ಡರಹಳ್ಳಿಯಲ್ಲಿ ಆರು ಕಡೆ ಮದ್ಯ ಮಾರಾಟವಾಗುತ್ತಿದೆ. ಕುಡಿದು ಲಿವರ್ ಹಾನಿಗೊಳಗಾಗಿ 16 ಮಂದಿ ಕಿರಿಯ ವಯಸ್ಸಿನವರು ಮೃತಪಟ್ಟಿದ್ದಾರೆ. ಅಕ್ರಮ ಮಾರಾಟವನ್ನು ಸ್ಥಗಿತಗೊಳಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರೂ ಪ್ರಯೋಜನವಾಗುತ್ತಿಲ್ಲ" ಎಂದು ಆಕ್ಷೇಪಿಸಿದರು.
"ಪ್ರತಿಯೊಬ್ಬರಿಗೆ ಎರಡೂವರೆ ಲೀಟರ್ ಮದ್ಯ ಸಂಗ್ರಹಕ್ಕೆ ಅವಕಾಶವಿದೆ. ಅದಕ್ಕಿಂತ ಹೆಚ್ಚು ಸಂಗ್ರಹ ಮಾಡಿಕೊಂಡಿದ್ದರೆ, ಅದರ ಹಿಂದೆ ಮಾರಾಟದ ಉದ್ದೇಶವಿದ್ದರೆ ಕ್ರಮ ಕೈಗೊಳ್ಳಬಹುದು. ಆದರೆ, ಅಬಕಾರಿ ಅಧಿಕಾರಿಗಳು ಬಾರ್ನವರಿಗೆ ಮಾರಾಟದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ನಿಯಮ ಮೀರಿ ಹೆಚ್ಚುವರಿ ಮದ್ಯ ಮಾರಾಟ ಮಾಡಿದ ಬಾರ್ಗಳ ವಿರುದ್ಧ ಮೂರು ಬಾರಿ ಪ್ರಕರಣ ದಾಖಲಾದರೆ ಪರವಾನಗಿ ರದ್ದು ಮಾಡಬಹುದು. ಆದರೆ, ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿಲ್ಲ. ಜೊತೆಗೆ ತಮ್ಮ ತಾಲ್ಲೂಕು ನೆರೆಯ ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಅಲ್ಲಿಂದ ಸೇಂದಿ ಕೂಡ ತಂದು ಮಾರಾಟ ಮಾಡಲಾಗುತ್ತಿದೆ" ಎಂದು ಹೇಳಿದರು.