ಕರ್ನಾಟಕ

karnataka

By ETV Bharat Karnataka Team

Published : Jun 19, 2024, 11:02 PM IST

ETV Bharat / state

ಕೇಂದ್ರದಲ್ಲಿರುವುದು ಕಿಚಡಿ ಸರ್ಕಾರ, ಹೆಚ್ಚು ಆಯುಷ್ಯವಿಲ್ಲ: ಪರಿಷತ್ ಸದಸ್ಯ ಸಲೀಂ ಅಹ್ಮದ್ - MLC Saleem Ahmed

ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

mlc-saleem-ahmed
ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ (ETV Bharat)

ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ (ETV Bharat)

ಹಾವೇರಿ:ಕೇಂದ್ರದಲ್ಲಿರುವುದು ಕಿಚಡಿ ಸರ್ಕಾರ. ಇದಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ಹಾವೇರಿಯಲ್ಲಿಂದು ಮಾತನಾಡಿದ ಅವರು, ಸರ್ಕಾರ ಯಾವಾಗ ಕುಸಿಯುತ್ತೋ ಗೊತ್ತಿಲ್ಲ ಎಂದರು.

ದೇಶದ ಜನ ಸಂವಿಧಾನ ರಕ್ಷಣೆ ಮಾಡುವ ತೀರ್ಪು ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಮೂರು ರೂಪಾಯಿ ಏರಿಕೆ ಮಾಡಿದ್ದಕ್ಕೆ ಬಿಜೆಪಿಯವರು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ಕಪಾಳಮೋಕ್ಷ ಮಾಡಿದ್ದಾರೆ. ಜನರು ಸಂವಿಧಾನ ರಕ್ಷಣೆಯತ್ತ ಒಲವು ತೋರಿದ್ದಾರೆ. ಇವರಿಂದ ನಾವು ಪಾಠ ಕಲಿಯಬೇಕಾ ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಒಂದೆಡೆ ನಾಯ್ಡು ಮತ್ತೊಂದು ಕಡೆ ನಿತೀಶ್ ಅವರನ್ನಿಟ್ಟುಕೊಂಡು ನೀವು ಸರ್ಕಾರ ಮಾಡುತ್ತಿದ್ದೀರಿ. ನಿಮ್ಮ ಸರ್ಕಾರ ಯಾವಾಗ ಬೀಳುತ್ತೆ ಅಂತ ಗೊತ್ತಿಲ್ಲ ಎಂದು ಹೇಳಿದರು.

2014ರಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ 65 ರೂಪಾಯಿಗೆ ಲೀಟರ್​ ಪೆಟ್ರೋಲ್ ಸಿಗುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ದರ 100ರ ಗಡಿ ದಾಟಿದೆ. ಅವಾಗ ಬಿಜೆಪಿಯವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ನಿಲ್ಲಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಸರ್ಕಾರ ಐದು ವರ್ಷಗಳ ಕಾಲ ಗ್ಯಾರಂಟಿ ನೀಡುತ್ತದೆ. ಬದ್ಧತೆಯನ್ನು ಕಾಪಾಡಿಕೊಳ್ಳುತ್ತೇವೆ. ಗ್ಯಾರಂಟಿಗಳನ್ನು ನಿಲ್ಲಿಸಿ ಎಂದು ಹೇಳುವ ಎದೆಗಾರಿಕೆ ಬಿಜೆಪಿಯವರಿಗಿಲ್ಲ ಎಂದರು.

ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯನ್ನು ಹೈಕಮಾಂಡ್​, ರಾಜ್ಯ ಮುಖಂಡರು, ವರಿಷ್ಠರು ಸೇರಿ ಕುಳಿತು ಚರ್ಚಿಸಿ ಆಯ್ಕೆ ಮಾಡುತ್ತಾರೆ. ಲೋಕಸಭೆ ಚುನಾವಣೆಯ ಸೋಲಿನ ಕುರಿತಂತೆ ಆದಷ್ಟು ಬೇಗ ಪರಾಮರ್ಶೆ ಸಭೆ ಮಾಡುತ್ತೇವೆ. ಹಾನಗಲ್ ಉಪಚುನಾವಣೆಯಲ್ಲಿ ಬಸವರಾಜ್ ಬೊಮ್ಮಾಯಿ ಸಿಎಂ ಇದ್ದರೂ ಸಹ ನಾವು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೆವು. ಆದರೆ, ರೀತಿ ಈ ಬಾರಿ ಶಿಗ್ಗಾಂವ್ ಉಪಚುನಾವಣೆಯಲ್ಲಿ ಬೊಮ್ಮಾಯಿ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಸಲೀಂ ಅಹ್ಮದ್ ತಿಳಿಸಿದರು.

ನಟ ದರ್ಶನ್ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ನಮ್ಮ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಪೊಲೀಸ್ ಇಲಾಖೆ ಮೇಲೆ ಯಾವ ರಾಜಕಾರಣಿಗಳೂ ಒತ್ತಡ ಹೇರುತ್ತಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ :ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಇಂಧನ ಬೆಲೆ ಏರಿಸಿಲ್ಲ: ಸಚಿವ ಸತೀಶ್​ ಜಾರಕಿಹೊಳಿ - Satish Jarakiholi

ABOUT THE AUTHOR

...view details