ಕರ್ನಾಟಕ

karnataka

ಮೈಸೂರು ದಸರಾ ಪೋಸ್ಟರ್‌ ಬಿಡುಗಡೆ: ನಾಡಹಬ್ಬದ ಯಶಸ್ಸಿಗೆ ಶ್ರಮಿಸಲು ಸಚಿವರ ಕರೆ - Dasara Poster Release

By ETV Bharat Karnataka Team

Published : 4 hours ago

ಈ ಬಾರಿ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ದಸರಾ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

dasara poster
ದಸರಾ ಪೋಸ್ಟರ್‌ ಬಿಡುಗಡೆ (ETV Bharat)

ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾ 2024ರ ಪೋಸ್ಟರ್‌ ಬಿಡುಗಡೆಯಾಗಿದೆ. ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.‌ತಗಂಡಗಿ ಹಾಗೂ ಇತರರು ಈ ಪೋಸ್ಟರ್‌ ಬಿಡುಗಡೆ ಮಾಡಿ, ದಸರಾ ಸಿದ್ಧತೆಗಳ ಕುರಿತಂತೆ 19 ದಸರಾ ಉಪ ಸಮಿತಿಗಳ ಸಭೆ ನಡೆಸಿದರು.

ಶುಕ್ರವಾರ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ''ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳವಾಗಿ, ಸಾಂಪ್ರದಾಯಿಕ ಆಚರಿಸಲಾಗಿತ್ತು. ಆದರೆ, ಈ ವರ್ಷ ಉತ್ತಮ ಮಳೆ ಆಗಿರುವುದರಿಂದ ಅದ್ಧೂರಿಯಾಗಿ ನಾಡಹಬ್ಬ ಆಚರಣೆ ಮಾಡಲಾಗುವುದು'' ಎಂದರು.

''ನಾಡಹಬ್ಬ ಆಚರಣೆಗೆ ನೇಮಕಗೊಂಡಿರುವ 19 ದಸರಾ ಉಪಸಮಿತಿಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಅಲ್ಲದೇ, ಈ ಸಲ ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರಗಳು ಪ್ರದರ್ಶನಗೊಳ್ಳಬೇಕು'' ಎಂದು ತಿಳಿಸಿದರು.

ಸ್ಥಬ್ಧಚಿತ್ರ ಮರು ಪ್ರದರ್ಶನವಾಗಬಾರದು:ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಮಾತನಾಡಿ, ''ಕಳೆದ ಬಾರಿ ಆಗಿರುವ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಈ ಬಾರಿಯ ದಸರಾ ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕ ಸಂಭ್ರಮ:50, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಬಿಂಬಿಸುವ ಕಲಾಕೃತಿಗಳನ್ನು ರಚಿಸಬೇಕು. ಕಳೆದ ಸಲ ಪ್ರದರ್ಶನಗೊಂಡಿರುವ ಸ್ಥಬ್ಧಚಿತ್ರ ಮತ್ತು ಕಲಾ ತಂಡಗಳ ಮೆರವಣಿಗೆಗಳು ಮರು ಪ್ರದರ್ಶನವಾಗಬಾರದು'' ಎಂದು ಸೂಚನೆ ನೀಡಿದರು.

''ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ, ವೀಕ್ಷಿಸಲು ಬಂದಂತಹ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ ಅದ್ಧೂರಿಯಾಗಿ ಜರುಗುವಂತೆ ನೋಡಿಕೊಳ್ಳಬೇಕು. ಉಪಸಮಿತಿಯಲ್ಲಿನ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಿ, ದಸರಾ ಮಹೋತ್ಸವ ಯಶಸ್ವಿಗೊಳಿಸಬೇಕು'' ಎಂದು ಕರೆ ನೀಡಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಸಂಸದ ಸುನಿಲ್ ಬೋಸ್, ವಿಧಾನಪರಿಷತ್​ ಸದಸ್ಯ ಡಾ.ಯತೀಂದ್ರ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ ಎಂ.ಗಾಯತ್ರಿ ಇತರರು ಇದ್ದರು.

ಇದನ್ನೂ ಓದಿ:ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ - Mysuru Dasara 2024

ABOUT THE AUTHOR

...view details