ಕರ್ನಾಟಕ

karnataka

ಆಹಾರ, ನೀರಿನ ಸುಸ್ಥಿರ ಭದ್ರತೆಯ ಥೀಮ್​​ನಲ್ಲಿ 14ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು - Bengaluru India Nano Summit

By ETV Bharat Karnataka Team

Published : Aug 4, 2024, 12:13 PM IST

ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶವನ್ನು ಆಹಾರ ಮತ್ತು ನೀರಿನ ಭದ್ರತೆಯ ಥೀಮ್‌ ಅಡಿಯಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಸಚಿವ ಭೋಸರಾಜು ತಿಳಿಸಿದರು.

ಬೆಂಗಳೂರು ಇಂಡಿಯಾ ನ್ಯಾನೋ 13 ನೇ ಆವೃತ್ತಿಯ ಸಮಾರೋಪ ಸಮಾರಂಭ
ಬೆಂಗಳೂರು ಇಂಡಿಯಾ ನ್ಯಾನೋ 13 ನೇ ಆವೃತ್ತಿಯ ಸಮಾರೋಪ ಸಮಾರಂಭ (ETV Bharat)

ಬೆಂಗಳೂರು: 2026ರಲ್ಲಿ ನಡೆಯಲಿರುವ 14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶವನ್ನು ಆಹಾರ ಮತ್ತು ನೀರಿನ ಭದ್ರತೆಯ ಥೀಮ್‌ ಅಡಿಯಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಹವಾಮಾನ, ಶಕ್ತಿ ಹಾಗೂ ಆರೋಗ್ಯ ಕ್ಷೇತ್ರಗಳ ಜೊತೆಯಲ್ಲೇ, ಜಾಗತಿಕವಾಗಿ ಆಹಾರ ಮತ್ತು ನೀರಿನ ಭದ್ರತೆ ಪ್ರಮುಖ ಸವಾಲುಗಳಾಗಿವೆ. ಇವುಗಳ ಸಮರ್ಪಕ ನಿರ್ವಹಣೆಯಲ್ಲಿ ಸುಸ್ಥಿರ ಕ್ರಮಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆಯ ಬಗ್ಗೆ ಮುಂದಿನ ಸಮಾವೇಶದಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ತಿಳಿಸಿದರು.

ಬೆಂಗಳೂರು ಇಂಡಿಯಾ ನ್ಯಾನೋ 13ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ರತ್ನ ಪ್ರೊ.ಸಿ.ಎನ್‌.ಆರ್‌.ರಾವ್‌ ಮಾರ್ಗದರ್ಶನದಲ್ಲಿ ಆರಂಭಿಸಲಾದ ಪ್ರತಿಷ್ಠಿತ ನ್ಯಾನೋ ಸಮಿಟ್‌ ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿಯನ್ನು ಗಳಿಸಿದೆ. ನ್ಯಾನೋ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳು, ಇರುವ ಅವಕಾಶಗಳು, ಉದ್ದಿಮೆಗಳ ಪ್ರಾರಂಭಕ್ಕೆ ನ್ಯಾನೋ ಕ್ಷೇತ್ರದ ವಿಫುಲ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳು, ಸ್ಟಾರ್ಟ್‌ಅಪ್‌, ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದೆ. ದೇಶ ವಿದೇಶಗಳ 700 ಕ್ಕೂ ಹೆಚ್ಚು ಪರಿಣಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಾವಿರಾರು ಜನ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡಿದ್ದಾರೆ ಎಂದರು.

ಕ್ವಾಂಟಮ್ ತಂತ್ರಜ್ಞಾನದಲ್ಲಿನ ಹೊಸ ಆವಿಷ್ಕಾರಗಳು ನಮ್ಮ ದೈನಂದಿನ ಜೀವನದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿವೆ. ಕ್ವಾಂಟಮ್ ತಂತ್ರಜ್ಞಾನವು ಅನೇಕ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆ ತರುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ತಂತ್ರಜ್ಞಾನದಲ್ಲಿ ಸಾಧ್ಯವಿರುವ ಹೊಸ ಸಾಧ್ಯತೆಗಳನ್ನ ತಲುಪಲು ಸಹಾಯಕವಾಗಲಿದೆ. ಹೊಸ ಆವಿಷ್ಕಾರ ಹಾಗೂ ಅಭಿವೃದ್ಧಿಗೂ ಕಾರಣವಾಗಲಿದೆ. ಈ ಪ್ರಮುಖ ಕ್ಷೇತ್ರದಲ್ಲಿ ನಮ್ಮ ನಾವೀನ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈಗಾಗಲೇ ಐ.ಐ.ಎಸ್.ಸಿ ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಕ್ವಾಂಟಮ್ ರಿಸರ್ಚ್ ಪಾರ್ಕ್​ಗೆ ಅಗತ್ಯ ಬೆಂಬಲ ನೀಡುತ್ತಿದೆ. ಕ್ವಾಂಟಮ್‌ ತಂತ್ರಜ್ಞಾನದ ಮೂಲಕ ಪ್ರಸ್ತುತ ಪಡಿಸಲಾಗಿರುವ ಅಗಾಧ ಅವಕಾಶಗಳನ್ನ ಉತ್ತಮವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ನಮ್ಮ ಜೀವನವನ್ನು ಸುಧಾರಿಸಲು, ಕೈಗಾರಿಕೆಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಕ್ವಾಂಟಮ್‌ ತಂತ್ರಜ್ಞಾನದ ಸಾಮರ್ಥ್ಯವನ್ನು ಆವಿಷ್ಕರಿಸಲು, ಅಂತಿಮವಾಗಿ ಸಮಾಜಕ್ಕೆ ಅದರ ಪ್ರಯೋಜನವನ್ನು ನೀಡಲು ನಾವು ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶದಂತೆಯೇ, ಬೆಂಗಳೂರು ಇಂಡಿಯಾ ಕ್ವಾಂಟಮ್‌ ಸಮಿಟ್‌ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯವನ್ನು ಸಂಶೋಧನೆ ಹಾಗೂ ಅಭಿವೃದ್ಧಿಯ ಪ್ರಮುಖ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವಂತ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪೋಸ್ಟರ್ಸ್ ಪ್ರಸೆಂಟೇಶನ್ ಸ್ಪರ್ಧೆಯಲ್ಲಿ ಬಹುಮಾನ ನೀಡಲಾಯಿತು. ನಾರಾಯಣ ಹೆಲ್ತ್‌ ಸಂಸ್ಥಾಪಕ ಡಾ.ದೇವಿ ಪ್ರಸಾದ್‌ ಶೆಟ್ಟಿ, ನ್ಯಾನೋ ಟೆಕ್ನಾಲಜಿ ವಿಷನ್‌ ಗ್ರೂಪ್ ಅಧ್ಯಕ್ಷ ಪ್ರೊ. ನವಕಾಂತ್‌ ಭಟ್‌, 13 ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶದ ಕಾರ್ಯನಿರ್ವಾಹಕ ಸಮಿತಿಯ ಅಧ್ಯಕ್ಷ ಪ್ರೊ.ಪಿ.ಎಸ್‌.ಅನಿಲ್‌ ಕುಮಾರ್‌, ಇಲಾಖೆಯ ಕಾರ್ಯದರ್ಶಿ ಡಾ.ಎಕ್‌ರೂಪ್‌ ಕೌರ್‌, ಕೆಸ್ಟೆಪ್ಸ್‌ ವ್ಯವಸ್ಥಾಪಕ ನಿರ್ದೇಶಕ ಪವನ್‌ ಕುಮಾರ್‌ ಮಾಲಪಾಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿದ್ದರಾಮಯ್ಯಗೆ ತೊಂದರೆ ಕೊಟ್ರೆ ಬೀದಿಗಿಳಿದು ಹೋರಾಟ: ಅಹಿಂದ ನಾಯಕರ ಎಚ್ಚರಿಕೆ - AHINDA Leaders

ABOUT THE AUTHOR

...view details