ಕರ್ನಾಟಕ

karnataka

ETV Bharat / state

ಸಿಸೇರಿಯನ್ ಹೆರಿಗೆಗಳ ಕಡಿವಾಣಕ್ಕೆ ನೂತನ ಕಾರ್ಯಕ್ರಮ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - DINESH GUNDU RAO

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಅವರು ಸಿಸೇರಿಯನ್​ ಹೆರಿಗೆಗಳ ಕಡಿವಾಣಕ್ಕೆ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿದ್ದೇವೆ ಎಂದಿದ್ದಾರೆ.

health-minister-dinesh-gundu-rao
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (ETV Bharat)

By ETV Bharat Karnataka Team

Published : Dec 16, 2024, 10:38 PM IST

Updated : Dec 16, 2024, 10:53 PM IST

ಬೆಳಗಾವಿ: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿಯ ಸುವರ್ಣ‌ ವಿಧಾನಸೌಧದಲ್ಲಿ ಇಂದು ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022ರಲ್ಲಿ ಶೇ.35 ಇದ್ದ ಸಿಸೇರಿಯನ್‌ ಪ್ರಮಾಣ, 2022-23ಕ್ಕೆ ಶೇ. 38ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ ಶೇ.46ರಷ್ಟಿದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 61ರಷ್ಟು ಸಿಸೇರಿಯನ್​ಗಳನ್ನು ಮಾಡಲಾಗುತ್ತಿದೆ. ಸಿಸೇರಿಯನ್​ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ‌ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನು ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ತಿಳಿಸಿದರು.

ಭ್ರೂಣ ಹತ್ಯೆ ವಿರುದ್ಧ ಯಶಸ್ವಿ ಡಿಕಾಯ್ ಆಪರೇಷನ್, 46 ಜನರ ಬಂಧನ: ರಾಜ್ಯದಲ್ಲಿ 2023-24ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆಗೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳನ್ನು ಕಂಡುಹಿಡಿಯಲಾಗಿದೆ. ಅಲ್ಲದೇ ಡಿಕಾಯ್‌ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.‌

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ ಆ್ಯಂಡ್ ಪಿ.ಎನ್.ಡಿ.ಟಿ ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚಿಸಲಾಗಿದೆ. 2018ರಿಂದ ರಾಜ್ಯದಲ್ಲಿ ‘ಬಾಲಿಕಾ' ಆನ್ಲೈನ್ ಸಾಫ್ಟವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್​ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಮಟ್ಟದಲ್ಲಿ ಶೇ.100ರಷ್ಟು ಗರ್ಭಿಣಿಯರ ನೋಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಇದುವರೆಗೂ ಪಿ.ಸಿ ಆಂಡ್ ಪಿ.ಎನ್.ಡಿ.ಟಿ ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್, ಮಾಲೀಕರು ಮತ್ತು ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳಲ್ಲಿ ದಂಡವಿಧಿಸಿ ಖುಲಾಸೆಗೊಳಿಸಲಾಗಿದೆ. ಇನ್ನು 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿ ಇರುತ್ತವೆ ಎಂದರು.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು ಮತ್ತು ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು 50 ಸಾವಿರದಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ಪಿ.ಸಿ ಆಂಡ್ ಪಿ.ಎನ್.ಡಿ.ಟಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಾಚರಣೆ ನಡೆಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವರು ವಿವರಿಸಿದರು.

ಇದನ್ನೂ ಓದಿ:ಪರಿಷತ್​ನಲ್ಲಿ ಪ್ರತಿಧ್ವನಿಸಿದ ಉ.ಕ ಅಭಿವೃದ್ಧಿ: ಕಿತ್ತೂರು ಕರ್ನಾಟಕಕ್ಕೂ‌ ₹5 ಸಾವಿರ ಕೋಟಿ ಕೊಡುವಂತೆ ಹುಕ್ಕೇರಿ ಮನವಿ - NORTH KARNATAKA PROBLEMS

Last Updated : Dec 16, 2024, 10:53 PM IST

ABOUT THE AUTHOR

...view details