ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರದ ಅಧಿಕೃತ ಅನುಮೋದನೆ - NEW UNIVERSITY

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರದ ಅಧಿಕೃತ ಅನುಮೋದನೆ ನೀಡಿದ್ದು, ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

Vidhana Soudha
ವಿಧಾನಸೌಧ (ETV Bharat)

By ETV Bharat Karnataka Team

Published : Jan 29, 2025, 7:42 PM IST

ಬೆಂಗಳೂರು:ಸಕ್ಕರೆ ನಾಡುಮಂಡ್ಯ ಜಿಲ್ಲೆಯ ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದಂತಾಗಿದೆ.

2024-25ನೇ ಸಾಲಿನ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ.

ಇದಕ್ಕಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬಜೆಟ್ ಘೋಷಣೆಯಂತೆ ಬೆಂಗಳೂರು ಕೃಷಿ ವಿ.ವಿಯ ವಿಶ್ರಾಂತಿ ಕುಲಪತಿ ಡಾ. ರಾಜೇಂದ್ರಪ್ರಸಾದ್‌ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ತಂಡವು ಹಲವು ಬಾರಿ ಸ್ಥಳ ಪರಿಶೀಲಿಸಿ, ಸಭೆಗಳನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಸಮಿತಿಯ ಅಭಿಪ್ರಾಯವನ್ನು ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಂದಿಟ್ಟು ಅನುಮೋದನೆ ಪಡೆದ ನಂತರ ಸರ್ಕಾರ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕಾಲುವೆ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿದೆ.

ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.

ಈ ಎಲ್ಲಾ ಅಂಶಗಳ ಆಧಾರದ ಮೇರೆಗೆ ಸರ್ಕಾರವು ಮಂಡ್ಯ ಜಿಲ್ಲೆಯ ವಿಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪಿಸಲು ಅನುಮೋದನೆ ನೀಡಿದೆ. ಷರತ್ತು ನಿಬಂಧನೆಗಳು ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ಮುಂದಿನ ಆದೇಶದಲ್ಲಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.

ಶೀಘ್ರವೇ ವಿಶೇಷಾಧಿಕಾರಿಗಳನ್ನು ನೇಮಿಸಿ ಪ್ರಸಕ್ತ ಸಾಲಿನಲ್ಲಿಯೇ ವಿ.ವಿ ಕಾರ್ಯಾರಂಭ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ:ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ಅನುಮೋದನೆ; ಸಿಎಂ, ಡಿಸಿಎಂಗೆ ಅಭಿನಂದನೆ - MANDYA MLAS MET CM AND DCM

ABOUT THE AUTHOR

...view details