ಬೆಂಗಳೂರು: ಸೆಪ್ಟೆಂಬರ್ 15ರಂದು (ನಾಳೆ) ವಿಶ್ವ ಪ್ರಜಾಪ್ರಭುತ್ವ ದಿನವಾಗಿದ್ದು, ಇದನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ವಿಶ್ವ ದಾಖಲೆಯ ಮಾನವ ಸರಪಳಿ ರಚನೆಗೆ ಸಿದ್ಧತೆ ನಡೆಸಲಾಗಿದೆ. ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡಂತೆ 2500 ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲು ಉದ್ದೇಶ ಹೊಂದಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿ, ಅಪ್ಪಿಕೊಂಡಿರುವ ನಾಡಿನ ಜನರಿಂದ ಯಶಸ್ವಿಯಾಗಿ ಈ ಕಾರ್ಯ ನಡೆಸಲು ಯೋಜನೆ ರೂಪಿಸಲಾಗಿದೆ. ಇದು ಜಗತ್ತಿನಲ್ಲಿಯೇ ಅತಿ ಉದ್ದದ ಮಾನವ ಸರಪಳಿ ಎನಿಸಿಕೊಳ್ಳಲಿದೆ. ಆ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ರೀತಿಯ ತಯಾರಿಗಳು ಕೂಡ ನಡೆದಿವೆ.
ಕಾರ್ಯಕ್ರಮದ ಉದ್ದೇಶ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ಜಗತ್ತಿಗೆ ಮಾದರಿಯಾಗಿದೆ. ಈ ಹಬ್ಬವನ್ನು ಪ್ರತಿಯೊಬ್ಬರ ಹಬ್ಬವಾಗಿಸಬೇಕು ಎಂಬ ಉದ್ದೇಶ ಹೊಂದಲಾಗಿದೆ. ಹಾಗಾಗಿ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಭಾರತ ಅರ್ಥಪೂರ್ಣ ದಿನವನ್ನಾಗಿಸಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ದೇಶದ ವಿಚಾರದಲ್ಲಿ ರಾಜ್ಯ ಸರ್ಕಾರ ಓಗೊಟ್ಟಿರುವುದನ್ನು ಮೆಚ್ಚಲೇಬೇಕಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಕಾರ್ಯಕ್ರಮದ ಆಯೋಜಕರು: ರಾಜ್ಯ ಸರ್ಕಾರ ಹಾಗೂ ಸಿವಿಲ್ ಸೊಸೈಟಿ ಸಂಸ್ಥೆಯವರ ಸಹಯೋಗದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಈ ಕಾರ್ಯಕ್ರಮವನ್ನು ಮಾಡಲಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಧಿಕಾರಿಗಳೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನೋಂದಣಿ:ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಳ್ಳುತ್ತಿದ್ದು ರೋಟರಿ ಇಂಟರ್ ನ್ಯಾಷನಲ್, ದಲಿತ ಸಂಘರ್ಷ ಸಮಿತಿಗಳು, ಎಎಲ್ಎಫ್, ಬಿಎಎಫ್ ಸೇರಿ ಹಲವು ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿವೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತ ಸಂಘ ಸಂಸ್ಥೆಗಳು democracydaykarnataka2024gmail. com ವಿಳಾಸಕ್ಕೆ ಇ ಮೇಲ್ ಮಾಡಬಹುದು. ಜತೆಗೆ 9482300400 ಸಂಖ್ಯೆಗೆ ವಾಟ್ಸ್ ಆಪ್ ಸಂದೇಶವನ್ನೂ ಕಳಿಸಬಹುದು. ಇನ್ನು, ಸಾರ್ವಜನಿಕರು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸುವ ಮೂಲಕ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು.