ಮೈಸೂರು:"ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುವುದು ಕಾಂಗ್ರೆಸ್ಗೆ ಚಟವಾಗಿದೆ" ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಸ್ವಾಮಿ ಟೀಕಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹೋರಾಟದ ವಿಚಾರವಾಗಿ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಅಂಬೇಡ್ಕರ್ ಬದುಕಿದ್ದಾಗ ಕಾಂಗ್ರೆಸ್ ಯಾವತ್ತಾದರೂ ಅವರನ್ನು ಗೌರವಿಸಿತ್ತಾ?. ಸಂವಿಧಾನ ತಿದ್ದುಪಡಿ ಮಾಡಿ ಪೀಠಿಕೆ ಬದಲಾಯಿಸಿದ್ದು ಕಾಂಗ್ರೆಸ್" ಎಂದು ವಾಗ್ದಾಳಿ ನಡೆಸಿದರು.
"ಬಿಜೆಪಿ ಎಂದೂ ಅಂಥ ಕೆಲಸ ಮಾಡಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ದೇಶಕ್ಕೆ ತುರ್ತು ಪರಿಸ್ಥಿತಿಯನ್ನು ಯಾವ ಕಾರಣಕ್ಕೆ ತಂದರು?. ಆಗ ದೇಶಕ್ಕೆ ಗಂಡಾಂತರ ಬಂದಿತ್ತಾ?, ಅವರ ಸ್ಥಾನ ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಘೋಷಿಸಿದರು. ಎರಡು ವರ್ಷ ದೇಶದಲ್ಲಿ ಸಂವಿಧಾನ ಆಡಳಿತ ಇರಲಿಲ್ಲ. ಇದನ್ನು ಮಾಡಿದ್ದು ಕಾಂಗ್ರೆಸ್. ಇದಕ್ಕೆಲ್ಲಾ ಕೇಂದ್ರದ ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರ ಕೊಡುವ ಕೆಲಸ ಮಾಡುತ್ತಿದ್ದಾರೆ" ಎಂದು ಹೇಳಿದರು.
"ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದನ್ನು ಫ್ಯಾಷನ್ ಮಾಡಿಕೊಂಡಿದ್ದಾರೆ ಅಂತ ಅಮಿತ್ ಶಾ ಹೇಳಿದರು. ಇದಕ್ಕೆ ಕೋಪ ಬರುತ್ತೆ, ಯಾವತ್ತೂ ಇಲ್ಲದ ಅಂಬೇಡ್ಕರ್ ಫೋಟೋ, ನೀಲಿ ಶಾಲು ಹಾಕಿಕೊಂಡು ಓಡಾಡುತ್ತಿದ್ದಾರೆ. ಈ ಬಗ್ಗೆ ಹೋರಾಟ ಮಾಡುತ್ತಿರುವ ದಲಿತ ಸಂಘಟನೆಗಳಿಗೆ ಮನವಿ. ಮೊದಲು ಯಾರು ಅಂಬೇಡ್ಕರ್ಗೆ ಮೋಸ ಮಾಡಿದ್ರೂ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್ನವರು ದಲಿತ ಸಂಘಟನೆಗಳ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ" ಎಂದು ದೂರಿದರು.