ಕರ್ನಾಟಕ

karnataka

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮೀಸಲಿಟ್ಟ 3,200 ಕೋಟಿಯಲ್ಲಿ 1,488 ಕೋಟಿ ಶಿಕ್ಷಣಕ್ಕೆ ಮೀಸಲು: ಸಚಿವ ಜಮೀರ್ ಅಹಮದ್ ಖಾನ್ - Minister Zameer Ahmed Khan

By ETV Bharat Karnataka Team

Published : Jul 29, 2024, 10:19 PM IST

ಅಲ್ಪಸಂಖ್ಯಾತ ನಿರ್ದೇಶನಾಲಯ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.98 ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

MINISTER ZAMEER AHMED KHAN
ಸಚಿವ ಜಮೀರ್ ಅಹಮದ್ ಖಾನ್ (ETV Bharat)

ಬೆಂಗಳೂರು: "ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಒಟ್ಟಾರೆ 3,200 ಕೋಟಿ ರೂ. ಬಜೆಟ್​ನಲ್ಲಿ 1,488 ಕೋಟಿ ರೂ ಶಿಕ್ಷಣಕ್ಕೆ ಮೀಸಲಲಿಡಲಾಗಿದೆ" ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಸೋಮವಾರ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ. ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ಎಸ್​ಎಸ್​ಎಲ್​ಸಿ, ಪಿಯುಸಿ, ಪದವಿ ಶಿಕ್ಷಣ ಈ ಹಂತಗಳನ್ನು ಉತ್ತಮ ಅಂಕಗಳೊಂದಿಗೆ ದಾಟಿದರೆ ನಿಮಗೆ ಉತ್ತಮ ಭವಿಷ್ಯ ಸಿಗಲಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಬೋಧಕ ವರ್ಗ ಗಮನ ಹರಿಸಬೇಕು. ಹಾಸ್ಟೆಲ್​ಗಳಲ್ಲಿ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಕೊಡುವವವರನ್ನು ಸಹಿಸುವುದಿಲ್ಲ" ಎಂದು ತಿಳಿಸಿದರು.

"ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆದ 54 ವಿದ್ಯಾರ್ಥಿಗಳ ಪೈಕಿ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 96 ಕ್ಕಿಂತ ಹೆಚ್ಚು ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ದ್ವಿಚಕ್ರ ವಾಹನ ನೀಡಲಾಗುವುದು. ಅಲ್ಪಸಂಖ್ಯಾತ ನಿರ್ದೇಶನಾಲಯ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.98 ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸಲಾಗುವುದು" ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಂಡಿಸಿಯ 2024-25 ನೇ ಸಾಲಿನ ಮೂರು ಹೊಸ ಯೋಜನೆಗಳಿಗೆ ಚಾಲನೆ ನೀಡಿ ಕೈಪಿಡಿ ಬಿಡುಗಡೆ ಮಾಡಲಾಯಿತು. ಅರಿವು ಶಿಕ್ಷಣ ಯೋಜನೆಯಡಿ ಪರೀಕ್ಷಾ ಪ್ರಾಧಿಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಿ 12 ಕೋಟಿ ರೂ. ಚೆಕ್ ಹಸ್ತಾಂತರ ಮಾಡಲಾಯಿತು. ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮದ್ ಅಲಿ ಖಾಜಿ, ಕೆಎಂಡಿಸಿ ಅಧ್ಯಕ್ಷ ಬಿ.ಕೆ. ಅಲ್ತಾಫ್ ಖಾನ್, ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ಸಚಿವರ ವಿಶೇಷ ಅಧಿಕಾರಿ ಸರ್ಫರಾಜ್ ಖಾನ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಮಕ್ಕಳಿಗೆ ಮಾನವೀಯತೆ ತುಂಬಿದ ಮೌಲ್ಯಾಧಾರಿತ ಶಿಕ್ಷಣ ನೀಡುವುದೇ ನಿಜವಾದ ದೇಶಪ್ರೇಮ: ಯು.ಟಿ. ಖಾದರ್​ - Speaker U T Khader

ABOUT THE AUTHOR

...view details