ಕರ್ನಾಟಕ

karnataka

By ETV Bharat Karnataka Team

Published : Jun 4, 2024, 9:33 PM IST

ETV Bharat / state

ವಿಷ್ಣು ಸ್ಮಾರಕಕ್ಕೆ ಜಮೀನು ಮಂಜೂರಾತಿ ವಿಚಾರ: ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ - Vishnu Memorial

ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ ಅವರ ಸ್ಮಾರಕ ನಿರ್ಮಾಣ ಮಾಡಲು 10 ಗುಂಟೆ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

VISHNUVARDHAN
ವಿಷ್ಣುವರ್ಧನ್ (ETV Bharat)

ಬೆಂಗಳೂರು: ಚಿತ್ರನಟರ ಸಮಾಧಿ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ಕೋರುವುದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ದಿವಂಗತ ನಟ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿತು.

ವಿ.ಎಸ್.ಎಸ್.ಅಭಿಮಾನ್ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಷ್ಣುವರ್ಧನ್‌ ಅವರು ಕನ್ನಡ ಚಿತ್ರರಂಗದ ಮೇರುನಟ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರನ್ನು ಆರಾಧಿಸುವವರು ಅನೇಕ ಮಂದಿ ಇದ್ದಾರೆ. ಹೀಗಾಗಿ ನಟ ಹುಟ್ಟಿದ ಹಾಗೂ ದೈವಾಧೀನರಾದ ದಿನದಂದು ಅವರಿಗೆ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸುವುದು ನಮ್ಮ ಅಭಿಲಾಷೆ. ಇದನ್ನು ಪರಿಗಣಿಸಿ ಅವರ ಅಂತ್ಯಕ್ರಿಯೆ ನಡೆದ ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ ಮೈಲಸಂದ್ರ ಗ್ರಾಮದ ಸ.ನಂ 26ರ ಅಭಿಮಾನ​ ಸ್ಟುಡಿಯೋದವರಿಗೆ ಮಂಜೂರಾದ 10 ಗುಂಟೆ ಜಾಗವನ್ನು ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಪೀಠವನ್ನು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ರೀತಿ ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸುವಂತೆ ಕೋರಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಬೇಕಿದ್ದಲ್ಲಿ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ:10 ವರ್ಷ ಕಾಯುವಿಕೆಗೆ ಕೊನೆಗೂ ಸಿಕ್ತು ಫಲ, ಕಲ್ಯಾಣ್​ಗೆ ಒಲಿದ ಗೆಲುವು - ಪವನ್​ಗೆ ವಿಜಯ ತಿಲಕವಿಟ್ಟ ಪತ್ನಿ - Lok Sabha Election Result 2024

ದಂಡ ವಿಧಿಸುವುದಾಗಿ ಎಚ್ಚರಿಕೆ: ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನೇರವೇರಿಸಿದ ಜಾಗದೊಂದಿಗೆ ಅವರ ಅಭಿಮಾನಿಗಳೂ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಆ ಜಾಗವನ್ನು ಪುಣ್ಯಭೂಮಿ ಎಂದು ಕರೆಯುವುದುಂಟು. ಈ ನಿಟ್ಟಿನಲ್ಲಿ ಅರ್ಜಿಯನ್ನು ಪರಿಗಣಿಸುವಂತೆ ಕೋರಿದರು. ಈ ವೇಳೆ ಪೀಠ, ಅರ್ಜಿಯಲ್ಲಿ ಯಾವುದೇ ತರನಾದ ಸಾರ್ವಜನಿಕ ಹಿತಾಸಕ್ತಿ ಕಾಣಸಿಗುತ್ತಿಲ್ಲ. ನ್ಯಾಯಾಲಯ, ಅದರಲ್ಲೂ ಉಚ್ಛ ನ್ಯಾಯಾಲಯದಲ್ಲಿ ಈ ಬಗ್ಗೆ ವ್ಯವಹರಿಸಲಾಗುವುದಿಲ್ಲ. ಈ ಅರ್ಜಿಗೆ ಅಧಿಕ ದಂಡ ವಿಧಿಸಬಹುದು. ಆದರೆ ತಾಳ್ಮೆಯಿಂದಲೇ ಅರ್ಜಿಯನ್ನು ವಜಾಗೊಳಿಲಾಗುತ್ತಿದೆ ಎಂದು ಪೀಠ ತಿಳಿಸಿತು.

ABOUT THE AUTHOR

...view details