ಕರ್ನಾಟಕ

karnataka

ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಅರ್ಜಿ : ಹೈಕೋರ್ಟ್​ ನೋಟಿಸ್ - High Court Notice to Govt

By ETV Bharat Karnataka Team

Published : Jul 1, 2024, 7:52 PM IST

ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಕುರಿತ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಸರ್ಕಾರಕ್ಕೆ ನೋಟಿಸ್ ನೀಡಿದೆ.

GOVERNMENT CIRCULAR  CURRENT ACADEMIC STREAM  COLLECTION OF FEES  BENGALURU
ಹೈಕೋರ್ಟ್​ ನೋಟಿಸ್ (ETV Bharat)

ಬೆಂಗಳೂರು : ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಆಕ್ಷೇಪ ವ್ಯಕ್ತಪಡಿಸಿ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಲ್ಲಿಸಿರುವ ಅರ್ಜಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ (ರಿ) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಸುತ್ತೋಲೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು. ಅಷ್ಟರೊಳಗೆ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡು ನ್ಯಾಯಾಲಯಕ್ಕೆ ಒದಗಿಸಬೇಕು. ಏಕೆಂದರೆ, ಇದು ಇತರ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೂ ಬಾಧಿಸಲಿದೆ ಎಂದು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ 2(ಬಿ)ರಂತೆ ಎಲ್ಲಾ ಖಾಸಗಿ ಶಾಲೆಗಳು 2024-25ನೇ ಶೈಕ್ಷಣಿಕ ಸಾಲಿನ ಶುಲ್ಕವನ್ನು ತಮ್ಮ ಶಾಲೆಯ ವೆಬ್‌ಸೈಟ್‌ನಲ್ಲಿ ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ವೆಬ್‌ಸೈಟ್ (ಎಸ್‌ಎಟಿಎಸ್)ದಲ್ಲಿ ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸಲು ಹಾಗೂ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆರ್‌ಟಿಇ ಕಾಯ್ದೆ ಸೆಕ್ಷನ್ 13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು 2024ರ ಮೇ 20ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಈ ಸುತ್ತೋಲೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ಶಿಕ್ಷಣ ಹಕ್ಕು ಕಾಯ್ದೆ ಖಾಸಗಿ ಮತ್ತು ಅನುದಾನಿತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಆಗಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಹೀಗಿದ್ದಾಗ, ಆರ್‌ಟಿಇ ಕಾಯ್ದೆಯಡಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಆಗುವುದಿಲ್ಲ. ಅಲ್ಲದೇ ಕರ್ನಾಟಕ ಶಿಕ್ಷಣ ಕಾಯ್ದೆ-1993ರ ಸೆಕ್ಷನ್ 141ಕ್ಕೂ ಇದು ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಆದ್ದರಿಂದ ಶಿಕ್ಷಣ ಇಲಾಖೆ 2024ರ ಮೇ 20ರಂದು ಹೊರಡಿಸಿರುವ ಸುತ್ತೋಲೆ ಆಕ್ಷೇಪಿಸಿ ಅರ್ಜಿದಾರರು 2024ರ ಮೇ 30ರಂದು ನೀಡಿರುವ ಮನವಿಯವನ್ನು ಪರಿಗಣಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಜತೆಗೆ ಅರ್ಜಿ ಇತ್ಯರ್ಥ ಆಗುವ ತನಕ ಮೇ 20ರ ಸುತ್ತೋಲೆಗೆ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸೀಮಿತವಾಗಿ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಓದಿ:ಪತ್ನಿ ಶೀಲ ಶಂಕಿಸಿ ಹತ್ಯೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ‌ ನ್ಯಾಯಾಲಯ - Life Imprisonment

ABOUT THE AUTHOR

...view details