ಕರ್ನಾಟಕ

karnataka

ETV Bharat / state

ಕೊರೊನಾ ವೇಳೆ ಸಾರಿಗೆ ನಿಗಮಗಳ ಮೃತ ಸಿಬ್ಬಂದಿಗೆ ಪರಿಹಾರ ನೀಡದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್​ - HIGH COURT

ರಾಜ್ಯ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆಯಂತೆ ಸಿಬ್ಬಂದಿಯ ಕುಟುಂಬಸ್ಥರಿಗೆ ಪರಿಹಾರ ನೀಡದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಹೈಕೋರ್ಟ್​
ಹೈಕೋರ್ಟ್​ (ETV Bharat)

By ETV Bharat Karnataka Team

Published : Jan 13, 2025, 7:23 PM IST

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬ ಸದಸ್ಯರಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ದಾವಣಗೆರೆಯ ತಾಹೀರ್ ಹುಸೈನ್ ಮತ್ತು ರಾಯಚೂರಿನ ಅಜೀಜ್ ಪಾಷಾ ಜಾಗೀರದಾರ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್‌ ಮತ್ತು ಎಸ್‌. ರಾಚಯ್ಯ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೊರೊನಾ ಸಂದರ್ಭದಲ್ಲಿ ಸಾವನ್ನಪ್ಪಿದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ಈವರೆಗೂ 30 ಲಕ್ಷ ಪರಿಹಾರ ನೀಡಿಲ್ಲ ಎಂದು ಪೀಠಕ್ಕೆ ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ಪೀಠ, ಜನವರಿ 27ರಂದು ಅರ್ಜಿಯ ವಿಚಾರಣೆ ಮುಂದುವರೆಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು.

ಕೋವಿಡ್‌ನಿಂದ ಸಾರಿಗೆ ನೌಕರರು ಸಾವನ್ನಪ್ಪಿದ್ದರೆ, ಅವರ ಕುಟುಂಬಕ್ಕೆ ತಲಾ 30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆಬ್ರವರಿ 10ರಂದು ಸುತ್ತೋಲೆ ಹೊರಡಿಸಿತ್ತು. ಮಾಹಿತಿ ಹಕ್ಕು ಕಾಯಿದೆ ಅಡಿ ಪಡೆದ ಮಾಹಿತಿ ಪ್ರಕಾರ 2020ರ ಮಾರ್ಚ್‌ನಿಂದ 2021ರ ಜೂನ್‌ವರಗೆ ಕೊರೊನಾದಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ ಎಂದು ವಿವರಿಸಲಾಗಿದೆ.

2021ರ ಫೆಬ್ರವರಿ 10ರಂದು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ ಜಾರಿಗೊಳಿಸಬೇಕು. ಸಾರಿಗೆ ನಿಗಮಗಳ ನೌಕರರು ಕೋವಿಡ್‌ನಿಂದ ಮೃತಪಟ್ಟ ಪ್ರಕರಣಗಳ ಸಂಬಂಧ ಮೃತ ನೌಕರರ ಕುಟುಂಬ ಸದಸ್ಯರು ಅಥವಾ ಅವಲಂಬಿತರಿಗೆ ಯಾವುದೇ ವಿಳಂಬವಿಲ್ಲದೇ ಕೂಡಲೇ 30 ಲಕ್ಷ ರೂಪಾಯಿ ಪರಿಹಾರ ಪಾವತಿಸುವುದನ್ನು ಖಾತರಿಪಡಿಸಬೇಕು. ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ವಿತರಿಸಲು ಅಗತ್ಯ ಹಣಕಾಸು ಬಿಡುಗಡೆ ಮಾಡಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: ಜಯಲಲಿತಾರ ಚಿನ್ನಾಭರಣ ಸೇರಿ ಎಲ್ಲ ವಸ್ತುಗಳನ್ನು ಸಂಬಂಧಿಕರಿಗೆ ಮರಳಿಸಲು ಹೈಕೋರ್ಟ್ ನಕಾರ

ಇದನ್ನೂ ಓದಿ: ಒಬ್ಬ ವ್ಯಕ್ತಿಯೇ ಆರ್‌ಟಿಐ ಅಡಿ ಸಲ್ಲಿಸಿದ್ದ 9 ಸಾವಿರಕ್ಕೂ ಹೆಚ್ಚು ಅರ್ಜಿ ವಜಾ; ₹9.6 ಲಕ್ಷ ಶುಲ್ಕ ಪಾವತಿಗೆ ಹೈಕೋರ್ಟ್​ ಆದೇಶ

ಇದನ್ನೂ ಓದಿ: ದಾವಣಗೆರೆ ಕೆಎಸ್ಆರ್​ಟಿಸಿ ಬಸ್ ನಿಲ್ಧಾಣಕ್ಕೆ 'ಬೆಸ್ಟ್ ಇನ್​​​ಫ್ರಾಸ್ಟ್ರಕ್ಚರ್​ ' ರಾಷ್ಟ್ರೀಯ ಪ್ರಶಸ್ತಿ ಗರಿ

ABOUT THE AUTHOR

...view details