ಕರ್ನಾಟಕ

karnataka

2026 ರಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯ ಕಾರಿಡಾರ್​ 2, 4 ಪೂರ್ಣ: ಸಚಿವ ಸೋಮಣ್ಣ - Sub Urban Railway Project

By ETV Bharat Karnataka Team

Published : Sep 9, 2024, 6:38 PM IST

Updated : Sep 9, 2024, 7:52 PM IST

ಬೆಂಗಳೂರು ಉಪನಗರ ರೈಲು ಯೋಜನೆಯ 2 ಮತ್ತು 4ನೇ ಕಾರಿಡಾರ್ ಸ್ಥಿತಿಗತಿ ಬಗ್ಗೆ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು.

ಕೇಂದ್ರ ಸಚಿವ ಸಚಿವ ಸೋಮಣ್ಣ
ಕೇಂದ್ರ ಸಚಿವ ಸಚಿವ ಸೋಮಣ್ಣ (ETV Bharat)

ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯ ಬಗ್ಗೆ ಸೋಮಣ್ಣ ಮಾಹಿತಿ (ETV Bharat)

ಬೆಂಗಳೂರು:ಬೆಂಗಳೂರು ಉಪನಗರ ರೈಲು ಯೋಜನೆಯ 2 ಮತ್ತು 4ನೇ ಕಾರಿಡಾರ್ ಅನ್ನು 2026ರ ಡಿಸೆಂಬರ್​​ನಲ್ಲಿ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಿದ್ದೇವೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಪ್ರಕಟಿಸಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಬ್ ಅರ್ಬನ್ ರೈಲ್ವೇ ಯೋಜನೆಯ 4ನೇ ಕಾರಿಡಾರ್​ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗೆ 25 ಕಿ.ಮೀ ದೂರವಿದ್ದರೆ, 2ನೇ ಕಾರಿಡಾರ್ ಹೀಲಲಿಗೆಯಿಂದ ರಾಜಾನುಕುಂಟೆವರೆಗೆ 46.88 ಕಿ.ಮೀ. ವ್ಯಾಪ್ತಿಯಲ್ಲಿ ರೈಲು ಮಾರ್ಗ ಸಿದ್ಧವಾಗಲಿದೆ. ಇದನ್ನು ಡಿಸೆಂಬರ್ 2026 ರೊಳಗೆ ಜನಸೇವೆಗೆ ನೀಡಲಾಗುವುದು ಎಂದು ಪ್ರಕಟಿಸಿದರು.

ಸುಮಾರು 15,767 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ರಾಜ್ಯದ ಪಾಲು ಶೇಕಡಾ 20 ರಷ್ಟಿದೆ. ಈವರೆಗೆ ಯೋಜನೆಗೆ ಒಟ್ಟು 1,165 ಕೋಟಿ ರೂ.‌ ಬಿಡುಗಡೆ ಮಾಡಿದೆ. ಕೆಲವೊಂದು ಕಡೆ ಭೂಸ್ವಾಧೀನದ ಸಮಸ್ಯೆ ಇದ್ದು, ಮೂರು ತಿಂಗಳ ಒಳಗೆ ಭೂಮಿ ಹಸ್ತಾಂತರಕ್ಕೆ ಅಧಿಕಾರಿಗಳು ಒಪ್ಪಿದ್ದಾರೆ. ಹೀಗಾಗಿ ಕಾಮಗಾರಿ ವಿಳಂಬಕ್ಕೆ ಯಾವ ಸಬೂಬು ಹೇಳದೇ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಒಟ್ಟು 4 ಕಾರಿಡಾರ್‌ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಕಾಮಗಾರಿಗೆ ಚುರುಕು ಮುಟ್ಟಿಸಲು ಕ್ರಮ ತೆಗೆದುಕೊಂಡಿದ್ದು, ಮೊದಲ ಹಂತದಲ್ಲಿ ನಿಗದಿತ ಅವಧಿಯೊಳಗೆ ಎರಡು ಕಾರಿಡಾರ್​ಗಳನ್ನು ಉದ್ಘಾಟಿಸಲಾಗುವುದು. ಇದರ ನಂತರ ಉಳಿದ ಎರಡು ಕಾರಿಡಾರ್​ಗಳ ಜಾರಿ ಸಂಬಂಧ ಚರ್ಚಿಸಲಾಗುವುದು ಎಂದರು.

ಸಮನ್ವಯ ಸಭೆಗೆ ಸೂಚನೆ:ಬೆಂಗಳೂರು ಮೆಟ್ರೊ, ಉಪನಗರ ರೈಲು ಯೋಜನೆ ಮತ್ತು ರೈಲ್ವೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕಾಗಿದೆ. ಒಂದಕ್ಕೊಂದು ಸ್ಪರ್ಧೆವೊಡ್ಡಿಕೊಳ್ಳುವುದರ ಬದಲು, ಎಲ್ಲಿ ಯಾರ ಸೇವೆ ಇಲ್ಲವೊ ಅಲ್ಲಿ ಮತ್ತೊಬ್ಬರು ಸೇವೆ ನೀಡುವಂತಾಗಲಿ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳನ್ನೂ ಸೇರಿಸಿಕೊಂಡು ಸಮನ್ವಯದ ಸಭೆಗಳನ್ನು ನಡೆಸಬೇಕು. ಪರಸ್ಪರ ಪೂರಕವಾಗಿ ಕೆಲಸ ಮಾಡುವುದರಿಂದ ಅನಗತ್ಯ ವಿಳಂಬ ತಡೆಯಬಹುದು ಎಂದು ಅವರು ಸಚಿವ ಸೋಮಣ್ಣ ಸಲಹೆ ನೀಡಿದರು.

ರೈಲ್ವೆ ಬೋಗಿಗಳ ಸಮಸ್ಯೆ:ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೆ ಬೋಗಿಗಳನ್ನು ಉತ್ಪಾದಿಸಿ, ಸರಬರಾಜು ಮಾಡಲು ಕೆ - ರೈಡ್ ಟೆಂಡರ್‌ ಕರೆದಿದ್ದು, ಯಾವ ಸಂಸ್ಥೆಯೂ ಇದರಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ವಿಷಯದಲ್ಲಿ ರೈಲ್ವೆ ಇಲಾಖೆಯು ನೆರವು ನೀಡಬೇಕೆನ್ನುವ ಸಚಿವ ಎಂ.ಬಿ.ಪಾಟೀಲ ಅವರ ಮನವಿಗೆ ಸ್ಪಂದಿಸಿದ ಸೋಮಣ್ಣ ಅವರು, ಆದಷ್ಟು ಬೇಗ ದೆಹಲಿಯಲ್ಲಿ ಸಭೆ ಆಯೋಜಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಉಪನಗರ ರೈಲ್ವೆ ಯೋಜನೆ ವಿಸ್ತರಣೆ:ಬೆಂಗಳೂರಿನ ನೆರೆಹೊರೆಯ ನಗರ/ಪಟ್ಟಣಗಳಿಗೆ ಸಂಪರ್ಕ ಕಲ್ಪಿಸಲು ಉಪನಗರ ರೈಲ್ವೆ ಯೋಜನೆಯ ವಿಸ್ತರಣೆ ಅಗತ್ಯ ಇದೆ. ಬೆಂಗಳೂರಿನಿಂದ ಸಮೀಪದ ತುಮಕೂರು, ಮೈಸೂರು, ಮಾಗಡಿ, ಗೌರಿಬಿದನೂರು, ಕೋಲಾರ ನಗರಗಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಯಾವ ರೀತಿ ಕೈಗೆತ್ತಿಕೊಳ್ಳಬೇಕು ಎಂಬುದರ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಮೊದಲು ಸಭೆಗಳನ್ನು ಮಾಡಿ ನಂತರ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಸೋಮಣ್ಣ ಅವರು ಸಚಿವ ಪಾಟೀಲ ಅವರ ಮನವಿಗೆ ಸ್ಪಂದಿಸಿದರು.

ಬೆಂಗಳೂರು- ಯುಲಂಹಕ- ದೇವನಹಳ್ಳಿ ನಡುವೆ ಸಂಪರ್ಕ ಕಲ್ಪಿಸುವ ಕಾರಿಡಾರ್‌-1 ಉಪನಗರ ರೈಲ್ವೆ ಯೋಜನೆಯನ್ನು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ಸಂಪರ್ಕಿಸುವ ಬದಲು ದೇವನಹಳ್ಳಿಯಿಂದಲೇ ನೇರವಾಗಿ ಕೋಲಾರಕ್ಕೆ ಸಂಪರ್ಕ ಕಲ್ಪಿಸುವ ಸಾಧ್ಯಾಸಾಧ್ಯತೆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ವರ್ತುಲ ರೈಲ್ವೆಗೆ ಸಂಪರ್ಕ:ಉಪನಗರ ರೈಲ್ವೆ ಯೋಜನೆಯನ್ನು ಬೆಂಗಳೂರು ಸುತ್ತಲಿನ ವರ್ತುಲ ರೈಲ್ವೆ ಹಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಇದೊಂದು ಒಳ್ಳೆಯ ಪರಿಕಲ್ಪನೆ ಆಗಿದ್ದು, ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಹೇಳಿದರು. ಸುಮಾರು 21,000 ಕೋಟಿ ವೆಚ್ಚದ 281 ಕಿ.ಮೀ ವರ್ತುಲ ರೈಲ್ವೆ ಯೋಜನೆಗೆ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು, ಉಪನಗರ ರೈಲುಗಳನ್ನೂ ಇದರ ಜತೆ ಸಂಪರ್ಕ ಮಾಡುವುದು ಹೆಚ್ಚು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಯಿತು.

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ, ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.

ಎರಡು ಕಾರಿಡಾರ್ ಕಾಮಗಾರಿ ಸ್ಥಿತಿಗತಿ:ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01ಕಿ.ಮೀ) ವರೆಗಿನ 2ನೇ ಕಾರಿಡಾರ್​ಗೆ 859.97 ಕೋಟಿ ರೂಪಾಯಿ ಮೊತ್ತದ ಟೆಂಡ‌ರ್ ಅನ್ನು 2022 ರಲ್ಲಿ ಕರೆಯಲಾಗಿದ್ದು, ಮೆಸರ್ಸ್ ಲಾರ್ಸನ್ ಅಂಡ್ ಟುಬೋ ಅವರಿಗೆ ನೀಡಲಾಗಿದೆ. ಶೇ.28 ರಷ್ಟು ಭೌತಿಕ ಪ್ರಗತಿ ಮತ್ತು ಶೇ.22ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. ಎಸ್ ಅಂಡ್ ಟಿ ಸೌಕರ್ಯಗಳ ಸ್ಥಳಾಂತರ ಪ್ರಕ್ರಿಯೆ ಸಂಪೂರ್ಣ ಮುಗಿದಿದೆ. ಶೇ.75 ರಷ್ಟು ವಿದ್ಯುತ್ ಸೌಕರ್ಯಗಳ ಸ್ಥಳಾಂತರ ಪ್ರಕ್ರಿಯೆ ಮುಕ್ತಾಯವಾಗಿದೆ. ಚಿಕ್ಕಬಾಣಾವರ- ಬೆನ್ನಿಗಾನಹಳ್ಳಿ ನಡುವಿನ ಕಾಮಗಾರಿ 2026ರ ಜೂನ್​ಗೆ ಮುಕ್ತಾಯವಾಗಲಿದೆ.

ಹೀಲಲಿಗೆ - ರಾಜಾನುಕುಂಟೆ (46.88 ಕಿ.ಮೀ) 4ನೇ ಕಾರಿಡಾರ್ ಸಿವಿಲ್ ಕಾಮಗಾರಿಗಳು (ವಯಡಕ್ಟ್ ಮತ್ತು ಅಟ್ ಗ್ರೇಡ್) 2023ರ ಡಿಸೆಂಬರ್ 30 ರಂದು 1040.51 ಕೋಟಿ ಮೌಲ್ಯದ ಟೆಂಡರ್ ನ್ನು ಎಲ್ ಅಂಡ್ ಟಿಗೆ ನೀಡಲಾಗಿದೆ‌. ಕಾಮಗಾರಿಗಳಲ್ಲಿ ಶೇ. 62ರಷ್ಟನ್ನು ಪೂರ್ಣಗೊಳಿಸಲಾಗಿದೆ. ವಿದ್ಯುತ್ ಸಂಪರ್ಕಗಳು ಮತ್ತು ಒಳಚರಂಡಿ ಕೊಳವೆಗಳು ಇತ್ಯಾದಿಗಳ ಸ್ಥಳಾಂತರ ಕಾರ್ಯ ಪ್ರಗತಿಯಲ್ಲಿದೆ. ಕಾಸ್ಟಿಂಗ್ ಯಾರ್ಡ್ ಕಾರ್ಯಾರಂಭದ ಮುಂಗಡ ಹಂತದಲ್ಲಿದೆ. ಚಿಕ್ಕ ಸೇತುವೆಗಳ ನಿರ್ಮಾಣ ಆರಂಭವಾಗಿದ್ದು 5 ಪೂರ್ಣಗೊಂಡಿವೆ. 15 ಸೇತುವೆಗಳ ಕಾಮಗಾರಿ ಪ್ರಗತಿಯಲ್ಲಿದೆ. 46.88 ಕಿ.ಮೀ.ಗಳಲ್ಲಿ 32 ಕಿ.ಮೀ.ಗೆ ಜೋಡಣೆ ಯೋಜನೆ ಮತ್ತು ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ: ರಾಜ್ಯ ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನಿಸಿದ್ದ ಆರೋಪಿಗಳು - Rameswaram Cafe Blast Case

Last Updated : Sep 9, 2024, 7:52 PM IST

ABOUT THE AUTHOR

...view details