ಕರ್ನಾಟಕ

karnataka

ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಮಳೆ ಆರ್ಭಟ; ಈ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ - MET Rain Alert

By ETV Bharat Karnataka Team

Published : Aug 1, 2024, 6:53 PM IST

ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ವರ್ಷಧಾರೆ ಮತ್ತಷ್ಟು ಧಾರಾಕಾರವಾಗಿ ಸುರಿಯುತ್ತಿದೆ. ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿದೆ.

rain
ಮಳೆ (ETV Bharat)

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆಯುವ ಲಕ್ಷಣ ಕಂಡುಬರುತ್ತಿದೆ. ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ. ಮುಖ್ಯವಾಗಿ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ರೆಡ್ ಅಲರ್ಟ್ ಕೊಡಲಾಗಿದೆ. ಹಾಗೆಯೇ, ನಾಳೆ ಆರೆಂಜ್ ಮತ್ತು ತದನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್​, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಗೆ ನಾಲ್ಕು ದಿನ ಮತ್ತು ಕೊಡಗು ಜಿಲ್ಲೆಗೆ ಎರಡು ದಿನ ಯೆಲ್ಲೋ ಅಲರ್ಟ್ ಇದೆ. ಉಳಿದಂತೆ, ಉತ್ತರ ಒಳನಾಡಿನ ಬೆಳಗಾವಿಗೆ ಕೂಡ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಮೂರ್ನಾಲ್ಕು ದಿನ ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ತಲುಪುಲಿದೆ. ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಅತಿ ಹೆಚ್ಚು ವರ್ಷಧಾರೆ ಸುರಿಯಲಿದೆ. ಬೆಳಗಾವಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ:ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ.

ಕಾರ್ಕಳದಲ್ಲಿ ಅತಿ ಹೆಚ್ಚು ಮಳೆ:ನಿನ್ನೆಯಿಂದ ಅತಿ ಹೆಚ್ಚು 23 ಸೆಂ.ಮೀ. ಮಳೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ದಾಖಲಾಗಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮತ್ತು ಕ್ಯಾಸಲ್ ರಾಕ್‌ನಲ್ಲಿ ತಲಾ 20 ಸೆಂ.ಮೀ. ಮಳೆಯಾಗಿದೆ.

ಮೀನುಗಾರರಿಗೆ ಎಚ್ಚರಿಕೆ:ಮುಂದಿನ ಕೆಲ ದಿನಗಳು ಕರಾವಳಿ ಭಾಗದಲ್ಲಿ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

''ದಕ್ಷಿಣ ಗುಜರಾತ್‌ನಿಂದ ಕೇರಳದ ಕರಾವಳಿಯುದ್ದಕ್ಕೂ ಸರಾಸರಿ ಸಮುದ್ರಮಟ್ಟದಲ್ಲಿ ಆಫ್‌ಶೋರ್ ಟ್ರಫ್ ಮುಂದುವರೆಯುತ್ತಿದೆ. ಮುಂಗಾರು ಮಾರುತಗಳು ಸಮುದ್ರಮಟ್ಟದಿಂದ 4.5ರಿಂದ 5.8 ಕಿ.ಮೀ.ಗಳ ನಡುವೆ ಸರಿಸುಮಾರು 20 ಡಿಗ್ರಿ ಉತ್ತರಕ್ಕೆ ಚಲಿಸುತ್ತಿವೆ. ಹೀಗಾಗಿ, ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಈ ಕಾರಣಕ್ಕೆ ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಮೇಲೆ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಲಿಂಗನಮಕ್ಕಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ - Linganamakki Dam Open

ABOUT THE AUTHOR

...view details