ಕರ್ನಾಟಕ

karnataka

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜೈಲುಪಾಲು - Renukaswamy Murder Case

By ETV Bharat Karnataka Team

Published : Jun 22, 2024, 3:43 PM IST

Updated : Jun 22, 2024, 6:31 PM IST

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜು. 4ರ ವರೆಗೆ ದರ್ಶನ್‌ ಸೇರಿದಂತೆ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

RENUKASWAMY MURDER CASE
ರೇಣುಕಾಸ್ವಾಮಿ ಕೊಲೆ ಪ್ರಕರಣ (ETV Bharat)

ರೇಣುಕಾಸ್ವಾಮಿ ಕೊಲೆ ಪ್ರಕರಣ (ETV Bharat)

ಬೆಂಗಳೂರು:ಚಿತ್ರದುರ್ಗದರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.

ದರ್ಶನ್ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿಚಾರಣೆ ಮುಕ್ತಾಯವಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸರ್ಕಾರಿ ಅಭಿಯೋಜಕರು ವಾದಿಸಿದರು.

ಇದಕ್ಕೂ ಮುನ್ನ ನ್ಯಾಯಾಲಯಕ್ಕೆ ರಿಮ್ಯಾಂಡ್ ಅರ್ಜಿಯನ್ನ ಸಲ್ಲಿಸಿದರು. ವಾದ ಆಲಿಸಿದ ನ್ಯಾಯಾಲಯವು, ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತು. 2011ರಲ್ಲಿ ಪತ್ನಿ ವಿಜಯಲಕ್ಷ್ಮೀ ಮೇಲೆ ಹಲ್ಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿಗೆ ಹೋಗಿ ಬಂದಿದ್ದರು. ಆದಾದ ಬಳಿಕ ಇದೀಗ ಮತ್ತೆ ಜೈಲು ಕಂಬಿ ಎಣಿಸುವಂತಾಗಿದೆ. ಕೆಲವೇ ಕ್ಷಣಗಳಲ್ಲಿ ದರ್ಶನ್ ಮತ್ತು ಅವರ ಸಹಚರರು ಪರಪ್ಪನ ಅಗ್ರಹಾರ ಜೈಲು ಪಾಲಾಗಲಿದ್ದಾರೆ.

ದರ್ಶನ್ ಕೋರ್ಟ್​ಗೆ ಬರುವ ಹಿನ್ನೆಲೆಯ ಆತನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಹಲಸೂರು ಗೇಟ್ ಇನ್ಸ್​ಪೆಕ್ಟರ್​ ನೇತೃತ್ವದ ತಂಡ ಬಂದೋಬಸ್ತ್ ಮಾಡಿಕೊಂಡಿತ್ತು. ಅಭಿಮಾನಿಗಳ ನುಕುನುಗ್ಗಲು ತಡೆಯಲು ಕೋರ್ಟ್ ಪ್ರವೇಶದ್ವಾರದಲ್ಲಿ ಎರಡು ಬದಿಯಲ್ಲಿ ಹಗ್ಗ ಕಟ್ಟಿ ನಿಯಂತ್ರಿಸಿದ್ದರು. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುವ ಮಾರ್ಗಮಧ್ಯೆವೂ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಇಂದು ಅಂತ್ಯ: ನ್ಯಾಯಾಂಗ ಬಂಧನ ಸಾಧ್ಯತೆ - Darshan Police custody

Last Updated : Jun 22, 2024, 6:31 PM IST

ABOUT THE AUTHOR

...view details