ಬೆಂಗಳೂರು:ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹಾಜರು ಪಡಿಸಿದ್ದಾರೆ. ಆರೋಪಿಯನ್ನು ಎಸ್ಐಟಿ ವಶಕ್ಕೆ ನೀಡಬೇಕು ಎಂದು ಎಸ್ಐಟಿ ಪರ ವಕೀಲರು ಕೋರಿದ್ದರು. ಅಂತೆಯೇ, ಆರು ದಿನಗಳ ಕಾಲ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿದೆ.
ಗುರುವಾರ-ಶುಕ್ರವಾರದ ಮಧ್ಯರಾತ್ರಿ ವಿದೇಶದಿಂದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಂತೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಇಂದು ನ್ಯಾಯಾಲಯಕ್ಕೆ ಆರೋಪಿಯನ್ನು ಅಧಿಕಾರಿಗಳು ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು, ''ನಿಮ್ಮ ಹೆಸರೇನು, ಎಲ್ಲಿ ಬಂಧಿಸಿದರು'' ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ''ನನ್ನ ಹೆಸರು ಪ್ರಜ್ವಲ್, ರಾತ್ರಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು'' ಎಂದು ಹೇಳಿದರು.
ಈ ವೇಳೆ ಎಸ್ಐಟಿ ಪರ ವಕೀಲ ಅಶೋಕ್ ನಾಯಕ್, ''ಆರೋಪಿಯ ಮೊಬೈಲ್ ಮಾತ್ರ ಸಿಕ್ಕಿದೆ. ಅದರಲ್ಲಿ ಫೇಸ್ ಲಾಕ್ ಅಳವಡಿಸಲಾಗಿದೆ. ಅದನ್ನು ಪರಿಶೀಲನೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಎಸ್ಐಟಿ ವಶಕ್ಕೆ ನೀಡಬೇಕು'' ಎಂದು ಕೋರಿದರು. ಮುಂದುವರೆದು, ''ಇವರೊಬ್ಬ ವಿಕೃತಕಾಮಿಯಾಗಿದ್ದು, ಪ್ರಕರಣ ಬೆಳಕಿಗೆ ಬಂದ ತಕ್ಷಣ ತನಿಖೆಯಿಂದ ತಪ್ಪಿಸಿಕೊಳ್ಳಲು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು'' ಎಂದೂ ವಕೀಲರು ನ್ಯಾಯಾಲಯದ ಗಮನ ಸೆಳೆದರು.
ಇಷ್ಟೇ ಅಲ್ಲ, ''ಈ ಆರೋಪಿ ವಿದೇಶಕ್ಕೆ ಪ್ರವಾಸಕ್ಕೆ ಹೋಗಿರುವುದಾಗಿ ಹೇಳಿದ್ದರು. ಈ ಹಿಂದೆ ಭಾರತಕ್ಕೆ ಬರಲು ಟಿಕೆಟ್ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಾರೆ. ಇನ್ನೇನು ವಿದೇಶದಲ್ಲಿ ಬಂಧಿಸುತ್ತಾರೆ ಎಂಬ ಅಂಶ ಗೊತ್ತಾದ ಹಿನ್ನೆಲೆಯಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ. ಪ್ರಕರಣದ ಸಮಂಜಸವಾದ ತನಿಖೆ ನಡೆಸಬೇಕಾಗುತ್ತದೆ. ಆದ್ದರಿಂದ ಎಸ್ಐಟಿ ವಶಕ್ಕೆ ನೀಡಬೇಕು . ಈ ಆರೋಪ ಜೀವಾವಧಿ ಶಿಕ್ಷೆ ನೀಡುವಂತಾಗಿದೆ'' ಎಂದು ಎಸ್ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿದರು.