ಕರ್ನಾಟಕ

karnataka

ETV Bharat / state

ಪಂಚ ಗ್ಯಾರಂಟಿ ಮಧ್ಯೆಯೂ ಆರ್ಥಿಕ ಪ್ರಗತಿ: ರಾಜ್ಯ ಸರ್ಕಾರದ ಸಾಧನೆ ಶ್ಲಾಘಿಸಿದ ರಾಜ್ಯಪಾಲ ಗೆಹ್ಲೋಟ್ - GOVERNOR THAWAR CHAND GEHLOT

ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಬಗ್ಗೆ ಮಾತನಾಡಿದರು.

GOVERNOR THAWAR CHAND GEHLOT
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ETV Bharat)

By ETV Bharat Karnataka Team

Published : Jan 26, 2025, 12:13 PM IST

ಬೆಂಗಳೂರು: ಕರ್ನಾಟಕ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿ ಬಳಿಕ ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು. ನಂತರ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.

ಎಲ್ಲರಿಗೂ ನಮಸ್ಕಾರ ಎನ್ನುತ್ತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ಕರ್ನಾಟಕ ಸಂವಿಧಾನದ ಮಹತ್ತರ ಆಶಯವಾದ ಸಾಮಾಜಿಕ ಮತ್ತು ಆರ್ಥಿಕ ನ್ಯಾಯವನ್ನು ನೆಲೆಗೊಳಿಸಲು ಶಕ್ತಿಮೀರಿ ಶ್ರಮಿಸುತ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದ ಸಾಮಾಜಿಕ ಮತ್ತು ಆರ್ಥಿಕ ನ್ಯಾಯಗಳಿಗೆ ಆಗುತ್ತಿರುವ ಹಿನ್ನಡೆಯನ್ನು ಮತ್ತು ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ಅರಿತುಕೊಂಡು ಜಾರಿಗೆ ತಂದ ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ. ಈ ಯೋಜನೆಗಳಿಂದ ಆರ್ಥಿಕ ಬಿಕ್ಕಟ್ಟು, ಅಭಿವೃದ್ಧಿ ಕುಂಠಿತವಾದೀತು ಎಂಬ ನಿರಾಶಾವಾದಿ ಭವಿಷ್ಯ ಸುಳ್ಳಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸಂವಿಧಾನದ ಆಶಯಗಳಿಗನುಗುಣವಾಗಿ ಒಕ್ಕೂಟ ಧರ್ಮದ ನೀತಿರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಿದೆ. ಒಕ್ಕೂಟ ಧರ್ಮಕ್ಕೆ ಚ್ಯುತಿಯಾದಾಗ ತನ್ನ ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತಿದೆ. ಮುಂದೆಯೂ ಸಂವಿಧಾನ ವಿಧಿಸಿದ ಒಕ್ಕೂಟ ತತ್ವಗಳ ಅನುಸಾರ ರಾಜ್ಯ-ರಾಜ್ಯಗಳ ಸಂಬಂಧ ಮತ್ತು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಸಂಬಂಧ ಮುಂದುವರಿಯಬೇಕು ಎಂದು ಕರ್ನಾಟಕ ಬಯಸುತ್ತದೆ ಎಂದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ (ETV Bharat)

ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ:ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾದ “ಗೃಹಲಕ್ಷ್ಮಿ” ಯೋಜನೆಯಡಿ, ಆಗಸ್ಟ್ 2023 ರಿಂದ ಪ್ರತಿ ಕುಟುಂಬದ ಯಜಮಾನಿಯರಿಗೆ ಮಾಸಿಕ ಎರಡು ಸಾವಿರ ರೂ ನಂತೆ ಒಟ್ಟು 35,180.20 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. “ಗೃಹ ಜ್ಯೋತಿ” ಯೋಜನೆಯಡಿ, ಪ್ರಸ್ತುತ 1.62 ಕೋಟಿ ಗ್ರಾಹಕರು ಪ್ರಯೋಜನ ಪಡೆಯುತ್ತಿದ್ದಾರೆ. “ಶಕ್ತಿ” ಯೋಜನೆ - ಮಹಿಳಾ ಸಬಲೀಕರಣವನ್ನು ಬಲಪಡಿಸುವತ್ತ ಸರ್ಕಾರದ ಒಂದು ಹೆಜ್ಜೆಯಾಗಿದೆ. ಯೋಜನೆಯ ಆರಂಭದಿಂದ ಈವರೆಗೆ ಒಟ್ಟು 373.27 ಕೋಟಿ ಟ್ರಿಪ್​ಗಳಲ್ಲಿ ಫಲಾನುಭವಿಗಳು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ಸರ್ಕಾರವು 9,051 ಕೋಟಿ ರೂ. ವಿನಿಯೋಗಿಸಿದೆ ಎಂದು ವಿವರಿಸಿದರು.

“ಯುವನಿಧಿ” ಯೋಜನೆಯಡಿಯಲ್ಲಿ 1,24,176 ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ 25,000 ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುವುದು. 12,000 ಅಭ್ಯರ್ಥಿಗಳಿಗೆ ಕೈಗಾರಿಕಾ ಸಂಪರ್ಕ ಕೋಶ ಮತ್ತು ಭವಿಷ್ಯದ ಕೌಶಲ್ಯಗಳ ಅಡಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಜನರ ಹಸಿವನ್ನು ನೀಗಿಸುವುದರ ದೃಷ್ಟಿಯಿಂದ “ಅನ್ನಭಾಗ್ಯ” ಯೋಜನೆಯನ್ನು ಜಾರಿಗೆ ತರಲಾಯಿತು. ಬಿಪಿಎಲ್‌ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿ ನೀಡುವ ಜೊತೆಗೆ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಸದಸ್ಯರಿಗೆ 170 ರೂ. ರಂತೆ ಅವರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ-2023 ರಿಂದ ಈವರೆ ಡಿಬಿಟಿ ಮೂಲಕ ವರ್ಗಾಯಿಸಲು 9,775.51 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಮೂಲಸೌಕರ್ಯ ಒದಗಿಸುವಲ್ಲಿ ಮುಂದೆ:ಕರ್ನಾಟಕ ಸರ್ಕಾರ 2024-25ರಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸಿದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿದೆ. ಡಿಸೆಂಬರ್ 2024 ರ ಅಂತ್ಯದ ವೇಳೆಗೆ, ರಾಜ್ಯದ ಆದಾಯ ಸಂಗ್ರಹವು 1,81,908 ಕೋಟಿಗಳಷ್ಟಿತ್ತು ಮತ್ತು ವರ್ಷದಿಂದ ವರ್ಷಕ್ಕೆ 13% ಬೆಳವಣಿಗೆಯನ್ನು ಸಾಧಿಸಿಕೊಂಡು ಬಂದಿದೆ. ರಾಜ್ಯಗಳು ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯದ ವಿಷಯದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ನಾಡಿನ ಸಮಗ್ರ ಅಭಿವೃದ್ಧಿ ಮತ್ತು ಸಂಪತ್ತಿನ ವಿನಿಯೋಗದಲ್ಲಿ ಸಾಮಾಜಿಕ ನ್ಯಾಯವನ್ನು ಅನುಷ್ಠಾನ ಮಾಡುವಲ್ಲಿ ಮಹತ್ತರ ಪಾತ್ರವಹಿಸಿದೆ. ಆರೋಗ್ಯ, ವಿದ್ಯುತ್‌, ಶಿಕ್ಷಣ, ರಸ್ತೆ ಮುಂತಾದ ಮೂಲಭೂತ ಸೌಲಭ್ಯಗಳ ಒದಗಿಸುವಿಕೆಯಲ್ಲಿ ಮುಂದೆ ಇದೆ ಎಂದು ಹೇಳಿದರು.

ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣವನ್ನು ಬಲಪಡಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ತರಲು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಇದರ ಜೊತೆಗೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಕಳೆದ ಒಂದೂವರೆ ವರ್ಷಗಳಲ್ಲಿ 13,000 ಕ್ಕೂ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಉಳಿದಿದ್ದ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಿದೆ. ಒಟ್ಟಾರೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಉದ್ದೇಶಿಸಿದೆ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ETV Bharat)

2024-25ರ ಅವಧಿಯಲ್ಲಿ 2491 ಕಿ.ಮೀ. ರಾಜ್ಯ ಹೆದ್ದಾರಿಗಳು ಮತ್ತು 3103 ಕಿ.ಮೀ. ಪ್ರಮುಖ ಜಿಲ್ಲಾ ರಸ್ತೆಗಳ ಸುಧಾರಣೆ ಮತ್ತು ನವೀಕರಣ ಪೂರ್ಣಗೊಂಡಿದೆ. 190 ಸೇತುವೆಗಳನ್ನು ನಿರ್ಮಿಸಲಾಗಿದೆ. ಹೈಬ್ರಿಡ್ ವರ್ಷಾಶನ ಮಾದರಿ (HAM) ಯಲ್ಲಿ ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರಿನವರೆಗಿನ 78.45 ಕಿ.ಮೀ. ರಾಜ್ಯ ಹೆದ್ದಾರಿಯ ಅಭಿವೃದ್ಧಿ 1696 ಕೋಟಿ ರೂ. ವೆಚ್ಚದಲ್ಲಿ ಪ್ರಗತಿಯಲ್ಲಿದೆ. 2024-25ನೇ ಸಾಲಿನಲ್ಲಿ, ಏಪ್ರಿಲ್ 2024 ರಿಂದ ಸೆಪ್ಟೆಂಬರ್ 2024 ರವರೆಗೆ 88,853 ಮಿಲಿಯನ್ ಯುಎಸ್ ಡಾಲರ್ ರಫ್ತು ಮಾಡುವ ಮೂಲಕ ರಾಜ್ಯವು ಒಟ್ಟಾರೆ ರಫ್ತಿನಲ್ಲಿ 1ನೇ ಸ್ಥಾನದಲ್ಲಿದೆ. ಹಿಂದಿನ 2023-24 ವರ್ಷಕ್ಕೆ ಹೋಲಿಸಿದರೆ, ರಾಜ್ಯವು ಒಟ್ಟಾರೆ ರಫ್ತಿನಲ್ಲಿ 11.17% ರಷ್ಟು ಬೆಳವಣಿಗೆಯನ್ನು ಸಾಧಿಸಿದೆ ಎಂದು ವಿವರಿಸಿದರು.

83.54 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ:ರಾಜ್ಯ ಸರ್ಕಾರ ಎಲ್ಲಾ ಗ್ರಾಮೀಣ ಮನೆಗಳಿಗೆ ನಲ್ಲಿ ಸಂಪರ್ಕಗಳನ್ನು ಒದಗಿಸುವ ಯೋಜನೆಯನ್ನು ಮುಂದುವರೆಸಿದೆ ಮತ್ತು 2024-25ನೇ ವರ್ಷದಲ್ಲಿ 6.75 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಲ್ಲಿ ಸಂಪರ್ಕ ಒದಗಿಸಲಾಗಿದೆ. ಇದರಿಂದಾಗಿ ಡಿಸೆಂಬರ್ 2024 ರ ಅಂತ್ಯದ ವೇಳೆಗೆ, ರಾಜ್ಯದ ಒಟ್ಟು 101.32 ಲಕ್ಷ ಮನೆಗಳಲ್ಲಿ 83.54 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಲ್ಲಿ ಸಂಪರ್ಕಗಳನ್ನು ಒದಗಿಸಲಾಗಿದೆ ಎಂದರು.

ಪ್ರಸಕ್ತ ವರ್ಷದಲ್ಲಿ ಒಟ್ಟು 1,97,140 ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 1,32,575 ಗ್ರಾಮೀಣ ಮಹಿಳೆಯರಿಗೆ ಕ್ಷೇತ್ರ ಪರೀಕ್ಷಾ ಕಿಟ್ (FTK) ತರಬೇತಿ ನೀಡಲಾಗಿದೆ. ಒಟ್ಟು 9,07,239 ನೀರಿನ ಮಾದರಿಗಳನ್ನು FTK ಗಳ ಮೂಲಕ ಪರೀಕ್ಷಿಸಲಾಗಿದೆ. ನೀರಿನ ಮಾದರಿಗಳು ಕಲುಷಿತಗೊಂಡಿರುವ ಹಳ್ಳಿಗಳಲ್ಲಿ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿಗೆ ಒತ್ತು:ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-2A ರಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಕೃಷ್ಣರಾಜಪುರದವರೆಗೆ 19.75ಕಿ.ಮೀ. ಮತ್ತು ಹಂತ-2B ರಲ್ಲಿ ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 38.44 ಕಿ.ಮೀ. ಉದ್ದದ ಒಟ್ಟು 14,788 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಯು ಪ್ರಗತಿಯಲ್ಲಿದೆ. ಹಂತ-3 ರಲ್ಲಿ 32.15 ಕಿ.ಮೀ ಉದ್ದದ ಕೆಂಪಾಪುರದಿಂದ ಜೆ.ಪಿ.ನಗರದವರೆಗೆ ಕಾರಿಡಾರ್-1, ಹಂತ-4 ರಲ್ಲಿ 12.50 ಕಿ.ಮೀ. ಉದ್ದದ ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಕಾರಿಡಾರ್-2 ಒಟ್ಟು 44.65 ಕಿ.ಮೀ. ಉದ್ದದ 15,611 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಯು ಪ್ರಗತಿಯಲ್ಲಿದೆ. ಈ ಯೋಜನೆಯನ್ನು ಡಿಸೆಂಬರ್ 2029 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಗರದಾದ್ಯಂತ 34 ಸ್ಥಳಗಳಲ್ಲಿ ವಸತಿ ಸಂಕೀರ್ಣಗಳನ್ನು ನಿರ್ಮಿಸುವ ಮೂಲಕ ಸುಮಾರು 30,000 ವಸತಿ ಘಟಕಗಳನ್ನು ವಿತರಿಸುವ ಗುರಿ ಹೊಂದಿದೆ. ಇಲ್ಲಿಯವರೆಗೆ, 25 ಯೋಜನೆಗಳಲ್ಲಿ ಒಟ್ಟು 14,909 ಫ್ಲಾಟ್​​ ನಿರ್ಮಾಣ ಪ್ರಾರಂಭಿಸಲಾಗಿದೆ ಮತ್ತು 10,615 ಫ್ಲಾಟ್‌ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಡಾ.ಕೆ.ಶಿವರಾಮ ಕಾರಂತ್ (ಹಂತ-1) ಬಡಾವಣೆಯ ರಚನೆಯ ಕಾರ್ಯ ವೇಗವಾಗಿ ನಡೆಯುತ್ತಿದೆ. ಶೀಘ್ರದಲ್ಲಿಯೆ ನಿವೇಶನಗಳ ಹಂಚಿಕೆ ಕಾರ್ಯವನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ವಿವರಿಸಿದರು.

ನಿರ್ಭಯ ಯೋಜನೆಯಡಿ ವಾಹನಗಳಿಗೆ Vehicle Location Tracking Devise & Emergency Panic Button ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಒಟ್ಟು 6,04,863 ಸಾರ್ವಜನಿಕ ಸೇವಾ ವಾಹನಗಳಿದ್ದು, ಅವುಗಳ ಪೈಕಿ ಡಿಸೆಂಬರ್ 2024ರ ಅಂತ್ಯಕ್ಕೆ 40,848 ವಾಹನಗಳಿಗೆ Vehicle Location Tracking Devise & Emergency Panic Button ಅನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ವಾಹನಗಳಿಗೆ ಸಾಧನಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.‌

ಕಾನೂನು ಸುವ್ಯವಸ್ಥೆಯಲ್ಲಿ ಉತ್ತಮ ಪ್ರಗತಿ:ಕರ್ನಾಟಕ ರಾಜ್ಯ ಪೊಲೀಸರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪತ್ತೆ ಮತ್ತು ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಎಲ್ಲಾ ರೀತಿಯ ಅಪರಾಧಗಳನ್ನು, ವಿಶೇಷವಾಗಿ ಗಂಭೀರ ಅಪರಾಧಗಳನ್ನು ನಿಯಂತ್ರಿಸುವ ಮೂಲಕ ಅಪರಾಧಗಳ ಸಂಖ್ಯೆಯಲ್ಲಿನ ಇಳಿಕೆಯು ಅತ್ಯಂತ ಗಮನಾರ್ಹ ಸಾಧನೆಯಾಗಿದೆ ಎಂದರು.

ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ:ಭೂಮಿಗೆ ಸಂಬಂಧಿಸಿದ ಯಾವುದೇ ಅಕ್ರಮ ವಹಿವಾಟುಗಳನ್ನು ತಡೆಗಟ್ಟಲು ಮತ್ತು ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಅನುಕೂಲವಾಗುವಂತೆ, ರೈತರ ಆಧಾರ್ ಸಂಖ್ಯೆಯನ್ನು ಪಹಣಿ ಪತ್ರಿಕೆಗಳಿಗೆ ಸೀಡಿಂಗ್ ಮಾಡಲು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ಹಾಲು ಉತ್ಪಾದಕರ ಪ್ರೋತ್ಸಾಹ ಯೋಜನೆಯಡಿ ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ 1124.15 ಕೋಟಿ ರೂ. ಪ್ರೋತ್ಸಾಹ ಧನ ಒದಗಿಸಲಾಗಿದ್ದು, ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್-ಎ, ಗ್ರೂಪ್-ಬಿ ಮತ್ತು ಇತರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆದೇಶ ಪತ್ರಗಳನ್ನು ನೀಡಲಾಗಿದೆ ಎಂದು ಭಾಷಣದಲ್ಲಿ ಉಲ್ಲೇಖಿಸಿದರು.

ಇದನ್ನೂ ಓದಿ:ಗಣರಾಜ್ಯೋತ್ಸವ 2025: ದೆಹಲಿಯ ಕರ್ತವ್ಯ ಪಥದಲ್ಲಿ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ಶ್ರೀಮಂತಿಕೆ ಪ್ರದರ್ಶನ

ಇದನ್ನೂ ಓದಿ:ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ಶನಿವಾರ ಒಂದೇ ದಿನ 62 ಸಾವಿರ ಜನ ವೀಕ್ಷಣೆ

ABOUT THE AUTHOR

...view details