ಬೆಂಗಳೂರು:ಸಾರ್ವತ್ರಿಕ ಲೋಕಸಭಾ ಚುನಾವಣೆ–2024ರ ಮತದಾನ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ನಡೆಯಲಿದ್ದು, ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆ–2019 ಹಾಗೂ ಸಾರ್ವತ್ರಿಕ ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯೂ ಸಹ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ: mediacellceokarnataka@gmail.com ಸಲ್ಲಿಸಬೇಕು.