ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟರ್ ಹಾಕಿದ್ದ ಘಟನೆಯಿಂದ ಉದ್ವಿಗ್ನಗೊಂಡಿದ್ದ ಮೈಸೂರಿನ ಉದಯಗಿರಿ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದ್ದು, ಪೊಲೀಸರು ಠಾಣೆ ಮೇಲೆ ಕಲ್ಲು ತೂರಿದ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ವಿರೋಧಿಸಿ ಜನರು ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದ್ದರು. ಬಂಧಿಸಲಾಗಿದ್ದ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಬಿಟ್ಟುಬಿಡುತ್ತಾರೆ ಎನ್ನುವ ತಪ್ಪು ಕಲ್ಪನೆಯಿಂದ, ಪೊಲೀಸ್ ಠಾಣೆಯಲ್ಲಿ ಗದ್ದಲ ಉಂಟಾಗಿತ್ತು. ಈ ವೇಳೆ ಕೆಲವರು ಠಾಣೆ ಹಾಗೂ ಪೊಲೀಸ್ ವಾಹನಗಳ ಮೇಲೆ ಕಲ್ಲುಗಳನ್ನು ತೂರಿದ್ದರು. ಲಘು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಸಿಡಿಸುವ ಮೂಲಕ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಕಲ್ಲೆಸೆದವರ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿತ್ತು. ಈ ತಂಡಗಳು ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾದ ಘಟನೆಯ ದೃಶ್ಯಗಳನ್ನು ಪರಿಶೀಲಿಸಿ, ಅದರ ಆಧಾರದಲ್ಲಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾತ್ತಿವೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.