ಬೆಂಗಳೂರು:ಇನ್ವೆಸ್ಟ್ ಕರ್ನಾಟಕ-2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯು ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.
"ನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ. ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ" ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸರ್ಕಾರದ ಜೊತೆ ಸುಜ್ಲಾನ್ ಕಂಪೆನಿ ಒಪ್ಪಂದ:ವಿಜಯಪುರದಲ್ಲಿ 3 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್ ಟರ್ಬೈನ್ ಬ್ಲೇಡ್ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್ ಕಂಪೆನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಉಪಕ್ರಮವು, ಗಾಳಿ ವಿದ್ಯುತ್ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ.
ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ವಿಂಗ್ಸ್- ವಿಟೆರಾ ಕಂಪನಿಯು 250 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಿದೆ. ಈ ಘಟಕವು ಕಾರ್ಯಾರಂಭ ಮಾಡಿದ 2ನೇ ವರ್ಷದಿಂದ 800 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ನಡೆಸಲಿದೆ. ದಕ್ಷಿಣ ಭಾರತದಲ್ಲಿನ ಬೇಳೆಕಾಳುಗಳ ಅತಿದೊಡ್ಡ ಸಂಸ್ಕರಣಾ ಘಟಕ ಇದಾಗಿರಲಿದೆ.