ಕರ್ನಾಟಕ

karnataka

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು - Muda Scam

By ETV Bharat Karnataka Team

Published : Aug 13, 2024, 6:55 AM IST

ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು ದಾಖಲಾಗಿದೆ.

ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ETV Bharat)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತಮ್ಮ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ.

ಮೈಸೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಸಲ್ಲಿಸಿದ್ದ ಖಾಸಗಿ ದೂರಿನ ಸಂಬಂಧ ಆದೇಶ ಹೊರ ಬರುವುದಕ್ಕೂ ಮುನ್ನ ಬೆಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ. ಅಬ್ರಾಹಂ ಮತ್ತೊಂದು ದೂರು ಸಲ್ಲಿಸಿದ್ದಾರೆ. ಸೋಮವಾರ ಸಂಜೆ ದೂರು ಸಲ್ಲಿಸಿದ್ದು, ಇಂದು (ಮಂಗಳವಾರ) ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಮೂಲ ಜಮೀನಿಗೆ ಮಾಲೀಕರೇ ಇಲ್ಲ. ಆ ಜಮೀನು ಸಿದ್ದರಾಮಯ್ಯ ಸಂಬಂಧಿಕರ ಹೆಸರಿಗೆ ಬಂದಿದೆ. ಅಲ್ಲಿಂದ ಸಿದ್ದರಾಮಯ್ಯ ಪತ್ನಿ ಹೆಸರಿಗೆ ಉಡುಗೊರೆಯಾಗಿ ಬಂದಿದ್ದು, ಅಂತಹ ಜಮೀನಿಗೆ ಬದಲಿ ನಿವೇಶನ ಪಡೆದುಕೊಳ್ಳಲಾಗಿದೆ. ಈ ಪ್ರಕ್ರಿಯೆ ಇಲ್ಲದ ಜಮೀನಿಗೆ ಬದಲಿ ನಿವೇಶನ ಪಡೆದುಕೊಂಡಂತಿದೆ. ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಿಮಿನಲ್ ಆರೋಪದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಇಂದು ಮೊದಲ ಖಾಸಗಿ ದೂರಿನ ತೀರ್ಪು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮುಖ್ಯಮಂತ್ರಿ ಅವರ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದ್ದು, ಇಂದು ತೀರ್ಪು ಹೊರಬೀಳಲಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ಅವರು ವಿಚಾರಣೆ ನಡೆಸಿ, ಆಗಸ್ಟ್ 9 ರಂದು ತೀರ್ಪು ಕಾಯ್ದಿರಿಸಿ ಮುಂದಿನ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿದ್ದರು.

ಇದನ್ನೂ ಓದಿ: ಸಿಎಂ ವಿರುದ್ಧ ಎಸ್ಐಟಿ/ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್​ - Muda Case

ABOUT THE AUTHOR

...view details