ಬೆಂಗಳೂರು:ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ತಾಜ್ ಅಲಿ ಮೌಲಾಸಾಬ್ ನದಾಫ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಂವಿಧಾನದ 224ನೇ ವಿಧಿಯ ಕಲಂ (1)ರ ಪ್ರಕಾರ ತಾಜ್ ಅಲಿ ಮೌಲಾಸಾಬ್ ನದಾಫ್ ಅವರನ್ನು ಅಧಿಕಾರ ವಹಿಸಿಕೊಳ್ಳುವ ದಿನದಿಂದ ಅನ್ವಯವಾಗುವಂತೆ, ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನದಾಫ್ ಅವರು ಇದೇ 17ರಂದು ಬೆಳಗ್ಗೆ ಹೈಕೋರ್ಟ್ನ ಕೋರ್ಟ್ ಹಾಲ್ ಒಂದರಲ್ಲಿ ನಡೆಯುವ ಸಮಾರಂಭದಲ್ಲಿ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಲಿದ್ದಾರೆ. ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೂತನ ನ್ಯಾಯಮೂರ್ತಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.