ಕರ್ನಾಟಕ

karnataka

ರಸ್ತೆಯಲ್ಲಿ ನಮಾಜ್ ಪ್ರಕರಣ ಕುರಿತ ಕೋಮುದ್ವೇಷ ಹುಟ್ಟಿಸುವ ಪೋಸ್ಟ್ : ಶರಣ್ ಪಂಪ್ವೆಲ್ ವಿರುದ್ಧದ ಎಫ್‌ಐಆರ್‌ಗೆ ತಡೆ - Sharan Pumpwell

By ETV Bharat Karnataka Team

Published : Jun 7, 2024, 10:58 PM IST

ರಸ್ತೆಯಲ್ಲಿ ನಮಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮುದ್ವೇಷ ಹುಟ್ಟಿಸುವ ಪೋಸ್ಟ್ ಹಂಚಿಕೊಂಡ ಶರಣ್ ಪಂಪ್​ವೆಲ್ ವಿರುದ್ದದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ.

high-court
ಹೈಕೋರ್ಟ್ (ETV Bharat)

ಬೆಂಗಳೂರು :ಮಂಗಳೂರು ನಗರದ ಕಂಕನಾಡಿ ವೃತ್ತದ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ, ಕೋಮು ದ್ವೇಷ ಭಾವನೆ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಆರೋಪ ಸಂಬಂಧ, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಮಂಗಳೂರು ನಗರದ ಸಿಇಎನ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ತನಿಖೆಗೆ ತಡೆಯಾಜ್ಞೆ ನೀಡಿದ್ದು ವಿಚಾರಣೆ ಮುಂದೂಡಿದೆ.

ಮಂಗಳೂರಿನ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಕ್ಕೆ ಕದ್ರಿ ಠಾಣಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಕೆಲವೇ ಗಂಟೆಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿ, ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ನಮಾಜ್ ಮಾಡುವವರಿಗೆ ಇರಲಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದರು.

ಅದನ್ನು ಆಕ್ಷೇಪಿಸಿ ಶರಣ್ ಪಂಪವೆಲ್, ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜ್ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ, ಅದನ್ನು ಬಜರಂಗದಳ ನಿಲ್ಲಿಸುತ್ತದೆ ಎಂದು ಫೇಸ್‌ಬುಕ್ ಪೋಸ್ಟ್ ಹಾಕಿದ್ದರು.

ಇದರಿಂದ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲು ಮತ್ತು ಕೋಮುದ್ವೇಷ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಮಂಗಳೂರು ನಗರ ಸಿಇಎನ್ ಠಾಣಾ ಪೊಲೀಸರು ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ :ಮಂಗಳೂರು: ರಸ್ತೆಯಲ್ಲಿ ನಮಾಜ್ ಪ್ರಕರಣ, ಪೊಲೀಸರಿಂದ ಬಿ ರಿಪೋರ್ಟ್ - Namaz On Streets Case

ABOUT THE AUTHOR

...view details