ಬೆಳಗಾವಿ: "ಕ್ಯಾನ್ಸರ್ ರೋಗವು ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವುದು ಕಳವಳಕಾರಿ ಸಂಗತಿ. ಇದಕ್ಕೆ ಹಲವು ಕಾರಣಗಳಿದ್ದು, ನಮ್ಮ ಜೀವನ ಶೈಲಿ ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರುತ್ತಿದೆ. ಹಾಗಾಗಿ, ಸದೃಢ ಆರೋಗ್ಯ ಮತ್ತು ಸೂಕ್ತ ಚಿಕಿತ್ಸೆಯ ಬಗ್ಗೆ ಜನರಲ್ಲಿ ಪರಿಣಮಕಾರಿಯಾಗಿ ಅರಿವು ಮೂಡಿಸುವ ತುರ್ತು ಅಗತ್ಯತೆ ಇದೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಕೆಎಲ್ಇ ಡಾ. ಸಂಪತ್ಕುಮಾರ ಶಿವಣಗಿ ನೂತನ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, "ವಿಶ್ವದ ಜನಸಂಖ್ಯೆಯಲ್ಲಿ ಪ್ರತಿ ವರ್ಷ 2 ಕೋಟಿ ಜನ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದರಲ್ಲಿ 97 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ಕೂಡ ಕ್ಯಾನ್ಸರ್ ಆಘಾತಕಾರಿಯಾಗಿ ಹರಡುತ್ತಿದೆ. ಪ್ರತಿ 1 ಲಕ್ಷ ಜನರಲ್ಲಿ 100 ಜನರಿಗೆ ಕ್ಯಾನ್ಸರ್ ಬರುತ್ತಿದೆ. 2025ರಲ್ಲಿ ಕ್ಯಾನ್ಸರ್ ರೋಗ ಹರಡುವ ದರವು ಶೇ.13ರಷ್ಟು ಹೆಚ್ಚಲಿದೆ ಎಂದು ಐಸಿಎಂಆರ್ ಸಂಶೋಧನೆಯಿಂದ ಗೊತ್ತಾಗಿದೆ" ಎಂದರು.
"ಕ್ಯಾನ್ಸರ್ ರೋಗಿಗಳ ದೈಹಿಕ ಮತ್ತು ಮಾನಸಿಕ ಅಗತ್ಯಗಳನ್ನು ಪರಿಹರಿಸುವುದು ಮತ್ತು ಸಮಗ್ರ ಆರೈಕೆ ಮಾಡುವುದು ಆರೋಗ್ಯ ವೃತ್ತಿಪರರ ಪ್ರಮುಖ ಕರ್ತವ್ಯವಾಗಿದೆ. ವೈದ್ಯರು ಹೇಳುವ ಪ್ರತಿಯೊಂದು ಸಹಾನುಭೂತಿ ಮತ್ತು ವಿಶ್ವಾಸದ ಮಾತುಗಳು ರೋಗಿಯ ಜೀವನವನ್ನು ಉತ್ತಮವಾಗಿ ಬದಲಾಯಿಸುವ ಶಕ್ತಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ" ಕರೆ ನೀಡಿದರು.
"ವೈದ್ಯಕೀಯ ವೃತ್ತಿಗೆ ತನ್ನದೇಯಾದ ಘನತೆ ಮತ್ತು ಜವಾಬ್ದಾರಿ ಇದೆ. ವೃತ್ತಿಪರ ವೈದ್ಯರು ನಿಮ್ಮಲ್ಲಿಗೆ ಬರುವ ರೋಗಿಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ಯಾವುದೇ ರೋಗಕ್ಕೆ ಪ್ರಾಥಮಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆಯುವಂತೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿ ವೈದ್ಯರ ಮೇಲಿದೆ. ಇನ್ನು ಕೇಂದ್ರ ಸರ್ಕಾರ ಎಲ್ಲ ವರ್ಗದ ಜನರಿಗೆ ಸಮರ್ಪಕ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಆಯುಷ್ ಮಾನ್ ಸೇರಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು" ಎಂದು ಸಲಹೆ ನೀಡಿದರು.