ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಬಿಡೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 40-45 ದಿನಗಳಲ್ಲಿ ದೇಶದಲ್ಲಿ 10 ಕೋಟಿ ಸದಸ್ಯರನ್ನು ನೋಂದಾಯಿಸಲಾಗಿದೆ. ಕರ್ನಾಟಕದಲ್ಲಿ 65 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಇದೇ ವೇಳೆ, ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು 'ಸಂಘಟನಾ ಪರ್ವ' ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ 58 ಸಾವಿರ ಬೂತ್ಗಳಲ್ಲಿ ಸದಸ್ಯತ್ವ ನೋಂದಣಿಯಾಗಿದೆ. ಮುಂದಿನ ಹಂತದಲ್ಲಿ ಪಕ್ಷದ ಸಮಿತಿಗಳ ರಚನೆ ಮೊದಲಾದ ಸಂಘಟನಾ ಕಾರ್ಯ ನಡೆಯಲಿದೆ ಎಂದು ವಿವರಿಸಿದರು. ಬೇರೆ ಯಾವುದೇ ರಾಜಕೀಯ ಪಕ್ಷಗಳಲ್ಲಿ ಇಷ್ಟೊಂದು ವ್ಯವಸ್ಥಿತ, ಕ್ರಮಬದ್ಧವಾದ ಸಂಘಟನಾತ್ಮಕ ಚಿಂತನೆ ಇಲ್ಲ ಎಂದು ಹೇಳಿದರು.
ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕೆಟ್ಟ ಸರ್ಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಇದರ ಪರಿಣಾಮವಾಗಿ ಆಡಳಿತ ಪಕ್ಷದ ಶಾಸಕರೇ ತಮ್ಮ ಆಡಳಿತವನ್ನು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.