ಬೆಂಗಳೂರು: ತ್ವರಿತಗತಿ ನ್ಯಾಯಾಲಯಗಳು ಮತ್ತು ಪರ್ಯಾಯ ವ್ಯಾಜ್ಯ ಇತ್ಯರ್ಥ ವಿಧಾನಗಳಿಂದಲೂ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗುತ್ತಿಲ್ಲ. ಹಾಗಾಗಿ ನ್ಯಾಯಾಲಯಗಳು ಕಾನೂನು ದುರ್ಬಳಕೆಯಂತಹ ಪ್ರಕರಣಗಳನ್ನು ಹತ್ತಿಕ್ಕಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬೆಳಗಾವಿಯ ಶಿವಪ್ಪ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಕಾನೂನಿನ ದುರ್ಬಳಕೆ ಪ್ರಕರಣಗಳ ವಿಲೇವಾರಿ ವಿಳಂಬಕ್ಕೆ ಅತ್ಯಂತ ಪ್ರಮುಖ ಕಾರಣ. ಅಂತಹ ಸಂದರ್ಭಗಳಲ್ಲಿ ನ್ಯಾಯಾಲಯಗಳು ಅತ್ಯಂತ ಸೂಕ್ಷ್ಮ ಮತ್ತು ಜಾಗರೂಕತೆಯಿಂದ ತನ್ನ ಮುಂದಿರುವ ಸಾಕ್ಷಿಗಳನ್ನು ಪರಿಶೀಲಿಸಬೇಕು. ಅಗತ್ಯಬಿದ್ದರೆ ಮಾತ್ರ ಅಪರಾಧ ದಂಡ ಸಂಹಿತೆ ಸೆಕ್ಷನ್ 216ರಡಿ ತೀರ್ಪು ನೀಡುವ ಮುನ್ನ ಆರೋಪಗಳನ್ನು ಬದಲಿಸಲು ಅವಕಾಶ ನೀಡಬಹುದು. ನ್ಯಾಯಾಲಯಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳದಿದ್ದರೆ ಪ್ರಕರಣಗಳ ಶೀಘ್ರ ವಿಲೇವಾರಿ ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ನ್ಯಾಯಾಲಯಗಳ ಮೇಲಿನ ಹೊರೆ ಇಳಿಸಲು ತ್ವರಿತಗತಿ ನ್ಯಾಯಾಲಯ ಹಾಗೂ ಪರ್ಯಾಯ ವ್ಯಾಜ್ಯ ಇತ್ಯರ್ಥ ವಿಧಾನಗಳು ಸಾಕಾಗುತ್ತಿಲ್ಲ. ಅಧೀನ ನ್ಯಾಯಾಲಯಗಳು ಕಾನೂನು ಪ್ರಕ್ರಿಯೆಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ನೋಡಿಕೊಂಡು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.