ಮಂಗಳೂರು(ದಕ್ಷಿಣ ಕನ್ನಡ): ನಗರದ ಹೊರವಲಯದ ಕೆ.ಸಿ.ರೋಡ್ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಬ್ಯಾಂಕ್ನಲ್ಲಿ ನಡೆದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಘಟನೆ ನಡೆದು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನದ ಬಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69) ಮತ್ತು ಕೆ.ಸಿ.ರೋಡ್ನ ಮೊಹಮ್ಮದ್ ನಝೀರ್ ಬಂಧಿತರು.
ಜನವರಿ 17ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಪಿಸ್ತೂಲ್ ತೋರಿಸಿ ಒಳಬಂದ ಐವರು ದರೋಡೆಕೋರರು ಕೆ.ಜಿಗಟ್ಟಲೆ ಚಿನ್ನ ಮತ್ತು ನಗದು ದರೋಡೆ ಮಾಡಿದ್ದರು.
ಈ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಗಳು ದರೋಡೆಗೈದ ಚಿನ್ನಾಭರಣ ಮತ್ತು ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ತನಿಖೆಯ ವೇಳೆ, ಸ್ಥಳೀಯ ನಿವಾಸಿ ಶಶಿ ತೇವರ್ ದರೋಡೆಗೆ ಸಂಚು ರೂಪಿಸಿದ್ದನ್ನು ಬಾಯಿಬಿಟ್ಟಿದ್ದರು. ಆದರೆ ಶಶಿ ತೇವರ್ ಯಾರು ಎಂಬುದು ಗೊತ್ತಾಗಿರಲಿಲ್ಲ. ತನಿಖೆ ಮುಂದುವರೆಸಿದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯಾದ ಬಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69) ಎಂಬಾತನನ್ನು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ ಬಂಧಿಸಿದ್ದಾರೆ. ಆತನನ್ನು ವಿಚಾರಿಸಿದಾಗ, ಏಳು ವರ್ಷಗಳಿಂದ ಸ್ಥಳೀಯ ವ್ಯಕ್ತಿ ಮೊಹಮ್ಮದ್ ನಝೀರ್ ಎಂಬಾತನೊಂದಿಗೆ ಸಂಪರ್ಕದಲ್ಲಿದ್ದು, ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆಗೆ ಸುಮಾರು 6 ತಿಂಗಳಿನಿಂದ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿದ್ದಾಗಿ ತಿಳಿಸಿದ್ದ. ಈ ಮಾಹಿತಿ ಮೇರೆಗೆ ಮತ್ತು ತಾಂತ್ರಿಕ ವಿಶ್ಲೇಷಣೆಯ ಆಧಾರದ ಮೇರೆಗೆ ಡಕಾಯತಿ ಕೃತ್ಯದಲ್ಲಿ ಸ್ಥಳೀಯ ವ್ಯಕ್ತಿ ಮೊಹಮ್ಮದ್ ನಝೀರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾತನಾಡಿ, "ಬಾಸ್ಕರ್ ಬೆಳ್ಚಪಾಡನೊಂದಿಗೆ ಮೊಹಮ್ಮದ್ ನಝೀರ್ ಸಂಚಿನಲ್ಲಿ ಪಾಲ್ಗೊಂಡಿದ್ದ. ಕೋಟೆಕಾರ್ ಸಹಕಾರಿ ಸಂಘ ಕಟ್ಟಡವನ್ನು ಆರೋಪಿಗಳಿಗೆ ತೋರಿಸಿಕೊಟ್ಟು ಡಕಾಯತಿ ನಡೆಸಬೇಕಾದ ದಿನ, ಸಮಯ ಹಾಗೂ ಸೊಸೈಟಿಯಲ್ಲಿರುವ ಸಿಬ್ಬಂದಿ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಸ್ಥಳೀಯ ಮಾಹಿತಿಯನ್ನೂ ತಿಳಿಸಿದ್ದ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ" ಎಂದು ತಿಳಿಸಿದರು.
"ಬಾಸ್ಕರ್ ಬೆಳ್ಚಪಾಡ ಸುಮಾರು 25 ವರ್ಷಗಳಿಂದ ಹುಟ್ಟೂರಾದ ಬಂಟ್ವಾಳದ ಕನ್ಯಾನವನ್ನು ಬಿಟ್ಟು ಮುಂಬೈನಲ್ಲಿ ವಾಸವಾಗಿದ್ದ. ಈತನ ವಿರುದ್ದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಡಕಾಯಿತಿ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. 2011ರಲ್ಲಿ ದೆಹಲಿಯಲ್ಲಿ ದರೋಡೆ ಪ್ರಯತ್ನ, 2021ರಲ್ಲಿ ಮುಂಬೈ ಕ್ರೈಂ ಬ್ರಾಂಚ್ ಸಿಐಡಿ ಠಾಣಾ ವ್ಯಾಪ್ತಿಯಲ್ಲಿ ಭಾರತ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ, 2022ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, 2022ರಲ್ಲಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಪ್ರಯತ್ನ ಪ್ರಕರಣ ದಾಖಲಾಗಿದೆ" ಅವರು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ಮತ್ತೋರ್ವ ಆರೋಪಿಗೂ ಗುಂಡೇಟು - MANGALURU BANK ROBBERY