ಕರ್ನಾಟಕ

karnataka

ETV Bharat / state

ವಾಲ್ಮೀಕಿ ನಿಗಮದ ಹಗರಣ: ಜಾಮೀನು ಕೋರಿ ಆರೋಪಿಗಳಿಂದ ಹೈಕೋರ್ಟ್‌ಗೆ ಅರ್ಜಿ - VALMIKI CORPORATION SCAM

ವಾಲ್ಮೀಕಿ ನಿಗಮದ ಹಗರಣ ಪ್ರಕರಣದ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ.

high court
ಹೈಕೋರ್ಟ್‌ (ETV Bharat)

By ETV Bharat Karnataka Team

Published : Nov 21, 2024, 10:57 PM IST

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ಹೈದರಾಬಾದ್‌ನ ಎಂ.ಚಂದ್ರಮೋಹನ್, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಿ.ಕೆ.ಜಗದೀಶ್ ಹಾಗೂ ಆಂಧ್ರಪ್ರದೇಶದ ಕೆ.ಶ್ರೀನಿವಾಸ್ ರಾವ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದವು. ವಿಚಾರಣೆಯಲ್ಲಿ ಭಾಗಿಯಾಗಿದ್ದ ರಾಜ್ಯ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎನ್.ಜಗದೀಶ್, ಪ್ರಕರಣದಲ್ಲಿನ ಮತ್ತೊಬ್ಬ ಆರೋಪಿ ಜಾಮೀನು ಕೋರಿದ್ದಾರೆ. ಎಲ್ಲ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ನಿಗದಿಗೊಳಿಸಬೇಕು ಎಂದರು. ವಾದ ಆಲಿಸಿದ ಪೀಠವು, ಎಲ್ಲಾ ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆಗೆ ನಿಗದಿಗೊಳಿಸಲು ರಿಜಿಸ್ಟ್ರಿಗೆ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು.

ಆರೋಪಿ ಮಣಿಮೇಕಳೈ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ 2024ರ ಸೆಪ್ಟಂಬರ್ 11ರಂದು ತಿರಸ್ಕರಿಸಿತ್ತು. ಪರಶುರಾಮ್ ದುರ್ಗಣ್ಣವರ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು 2024ರ ಆಗಸ್ಟ್ 22ರಂದು ತಿರಸ್ಕರಿಸಿದ್ದ ಹೈಕೋರ್ಟ್, ಪ್ರಕರಣದಲ್ಲಿನ 12ನೇ ಆರೋಪಿ ನೆಕ್ಕುಂಟಿ ನಾಗರಾಜ್‌ಗೆ 2024ರ ಸೆಪ್ಟಂಬರ್ 4ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಆರೋಪಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಗರಣದ ತನಿಖೆಗಾಗಿ 2024ರ ಮೇ 31ರಂದು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.

ಇದನ್ನೂ ಓದಿ:ವಕ್ಫ್ ಮಂಡಳಿಯಿಂದ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆ ಆದೇಶಕ್ಕೆ ಹೈಕೋರ್ಟ್ ತಡೆ

ABOUT THE AUTHOR

...view details