ಕರ್ನಾಟಕ

karnataka

By ETV Bharat Karnataka Team

Published : Mar 23, 2024, 5:53 PM IST

ETV Bharat / state

ಹೆಚ್ಚುತ್ತಿರುವ ಬಿಸಿಲು: ದಕ್ಷಿಣಕನ್ನಡ ಜಿಲ್ಲೆಯ ಡ್ಯಾಂಗಳಲ್ಲಿ ಇಳಿಕೆಯಾಗುತ್ತಿದೆ ನೀರು - Water is decreasing in dams

ಹೆಚ್ಚುತ್ತಿರುವ ಬಿಸಿಲಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಡ್ಯಾಂಗಳಲ್ಲಿ ನೀರಿನ ಪ್ರಮಾಣವೂ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ.

DAKSHINA KANNADA DISTRICT  WATER PROBLEM IN MANGALURU  WATER PROBLEMS IN KARNATAKA  NO RAIN IN KARNATAKA
ದ.ಕ ಜಿಲ್ಲೆಯ ಡ್ಯಾಂಗಳಲ್ಲಿ ಇಳಿಕೆಯಾಗುತ್ತಿದೆ ನೀರು

ದ.ಕ ಜಿಲ್ಲೆಯ ಡ್ಯಾಂಗಳಲ್ಲಿ ಇಳಿಕೆಯಾಗುತ್ತಿದೆ ನೀರು

ಮಂಗಳೂರು:ಬಿಸಿಲ ಬೇಗೆ ಹೆಚ್ಚಾಗುತ್ತಿರುವಂತೆಯೇ ದ.ಕ. ಜಿಲ್ಲಾದ್ಯಂತ ನದಿ ಅಣೆಕಟ್ಟುಗಳಲ್ಲಿ ನೀರು ಸಂಗ್ರಹದ ಪ್ರಮಾಣವೂ ಇಳಿಕೆ ಆಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್​ಗಳಿಗೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ ದಿನೇ ದಿನೆ ನೀರಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಬಿಸಿಲಿನಿಂದ ಆವಿಯ ಪ್ರಮಾಣವೂ ಹೆಚ್ಚಾಗುತ್ತಿದೆ.

ದ.ಕ ಜಿಲ್ಲೆಯ ಡ್ಯಾಂಗಳಲ್ಲಿ ಇಳಿಕೆಯಾಗುತ್ತಿದೆ ನೀರು

ಪಾಲಿಕೆಗೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ ಕಳೆದ ವಾರದವರೆಗೂ ಮಾರ್ಚ್ ಪ್ರಥಮ ವಾರದಲ್ಲಿ 6 ಮೀಟರ್‌ವರೆಗೆ ನೀರು ಸಂಗ್ರಹವಿತ್ತು. ಬಳಿಕ ಇಂಚಿಂಚೂ ಕಡಿಮೆಯಾಗುತ್ತಿದೆ. ಕಳೆದ ಶನಿವಾರ 5.88 ಮೀಟರ್‌ಗೆ ಇಳಿಕೆಯಾಗಿದ್ದರೆ, ಈ ಶನಿವಾರ 5.66 ಮೀಟರ್‌ಗೆ ಇಳಿದಿದೆ. ತುಂಬೆ ಅಣೆಕಟ್ಟಿನ ಎಲ್ಲ ಗೇಟ್‌ಗಳನ್ನು ಈಗಾಗಲೇ ಮುಚ್ಚಲಾಗಿದ್ದು, ಕೆಳ ಭಾಗದಿಂದ ಪಂಪ್ ಮೂಲಕ ನೀರನ್ನು ಮೇಲ್ಭಾಗಕ್ಕೆ ಹರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಸದ್ಯ ನಗರ ಸೇರಿದಂತೆ ದ.ಕ. ಜಿಲ್ಲಾದ್ಯಂತ ಕುಡಿಯುವ ನೀರಿಗೆ ಸಂಬಂಧಿಸಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ.

ಮಾರ್ಚ್ ತಿಂಗಳಲ್ಲಿ ಬಹುತೇಕವಾಗಿ ಬಜ್ಪೆ, ಕೋಟೆಕಾರು, ಉಳ್ಳಾಲದ ಕೆಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಸಹಜವಾಗಿದ್ದು, ಸಮಸ್ಯೆ ಇರುವಲ್ಲಿ ಪ್ರಸಕ್ತ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಈಗಾಗಲೇ ತಿಳಿಸಿದ್ದಾರೆ.

ದ.ಕ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ಗ್ರಾಮಾಂತರ ಹಾಗೂ ನಗರ ಭಾಗಗಳಲ್ಲಿ ಸದ್ಯ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ. ಹಾಗಿದ್ದರೂ ನದಿ, ತೊರೆ, ಹಳ್ಳ ಕೊಳ್ಳಗಳಲ್ಲಿ ನೀರಿನ ಪ್ರಮಾಣ ಇಳಿಮುಖವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಜೀವ ನದಿಗಳಿಗೆ ಕಿಂಡಿ ಅಣೆಕಟ್ಟುಗಳನ್ನು ಕಟ್ಟಿರುವಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಿದೆ. ಸುಳ್ಯದ ಜೀವನದಿ ಪಯಸ್ವಿನಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆಯಾದರೂ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹವಿದೆ. ಬೆಳ್ತಂಗಡಿಯಲ್ಲಿಯೂ ನಗರ ಪ್ರದೇಶಗಳಿಗೆ ನೀರು ಪೂರೈಕೆಯಾಗುವ ಚೆಕ್‌ಡ್ಯಾಮ್‌ಗಳಲ್ಲಿ ನೀರು ಸಂಗ್ರಹವಿದೆ. ಆದರೆ, ನದಿಯಲ್ಲಿ ನೀರಿನ ಪ್ರಮಾಣ ಮಾತ್ರ ಇಳಿಕೆಯಾಗಿದೆ. ಪುತ್ತೂರು ಹಾಗೂ ಬಂಟ್ವಾಳ ಭಾಗದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಇದೆ.

ಕರಾವಳಿಯಲ್ಲಿ ಏಪ್ರಿಲ್ ಮೇ ತಿಂಗಳಲ್ಲಿ ಮುಂಗಾರು ಪೂರ್ವ ವಾಡಿಕೆ ಮಳೆಯಾಗುತ್ತದೆ. ದಕ್ಷಿಣ ಕ‌ನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸ್ವಲ್ಪ ಮಾತ್ರ ಮಳೆಯಾಗಿದೆ. ಮುಖ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಮಳೆಯಾದರೆ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಆಗದು. ಜಿಲ್ಲೆಯಾದ್ಯಂತ ಕಳೆದ ಹಲವು ವರ್ಷಗಳಿಂದೀಚೆಗೆ ಅಂತರ್ಜಲ ಭಾರೀ ಪ್ರಮಾಣದಲ್ಲಿ ಕುಸಿತವಾಗಿರುವ ಕಾರಣ ಬೋರ್‌ವೆಲ್‌ಗಳಲ್ಲಿಯೂ ಬೇಸಿಗೆ ಸಮಯದಲ್ಲಿ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ.

ಎಎಂಆರ್ ಅಣೆಕಟ್ಟಿನ ನೀರಿನ ಸಂಗ್ರಹದಲ್ಲಿಯೂ ಇಳಿಕೆಯಾಗುತ್ತಿದೆ. ಉಳ್ಳಾಲ, ಕೊಲ್ಯ, ಕೋಟೆಕಾರು ಮೊದಲಾದ ಪ್ರದೇಶಗಳಲ್ಲಿ ಈ ಹಿಂದಿನಂತೆ ಈ ಬಾರಿಯೂ ಫೆಬ್ರವರಿಯಲ್ಲೇ ಬಾವಿಗಳಲ್ಲಿ ನೀರು ಕಡಿಮೆಯಾಗಿದ್ದು, ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುತೇಕ ಪ್ರದೇಶಗಳಲ್ಲಿ ಜನರು ಬಾವಿ ನೀರು ಅಥವಾ ಬೋರ್‌ವೆಲ್ ನೀರನ್ನು ಆಶ್ರಯಿಸಿದ್ದಾರೆ. ಉಳಿದಂತೆ ಇಲ್ಲಿ ಪಂಚಾಯತ್‌ನಿಂದ ಪೈಪ್‌ಲೈನ್ ಮೂಲಕ ಹಲವೆಡೆ ಎರಡು ದಿನಗಳಿಗೊಮ್ಮೆ ನಿಗದಿತ ಅವಧಿಗೆ ನೀರು ಪೂರೈಕೆ ಮಾಡಲಾಗುತ್ತದೆ.

ಮಂಗಳೂರು ನಗರ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನ ಸುತ್ತಮುತ್ತ ಕೃಷಿಗೆ ನೀರು ಉಪಯೋಗಿಸುವುದನ್ನು ಸಂಪೂರ್ಣವಾಗಿ ತಡೆಹಿಡಿಯಲು ದ.ಕ. ಜಿಲ್ಲಾಧಿಕಾರಿ ಈಗಾಗಲೇ ಆದೇಶಿಸಿದ್ದಾರೆ. ಕೈಗಾರಿಕೆಗಳಿಗೂ ನೀರಿನ ಮಟ್ಟವನ್ನು ಅನುಸರಿಸಿ ನೀರು ಪೂರೈಕೆಯಲ್ಲಿ ಕಡಿತ ಮಾಡುವಂತೆ ಸೂಚಿಸಲಾಗಿದೆ. ಸದ್ಯ ತುಂಬೆ ಅಣೆಕಟ್ಟು, ಎಎಂಆರ್ ಹಾಗೂ ಬಿಳಿಯೂರು ಅಣೆಕಟ್ಟಿನಲ್ಲಿ ನೀರು ಸಂಗ್ರಹ ಇರುವುದರಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ರೇಶನಿಂಗ್ ಮಾಡಲಾಗುತ್ತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಓದಿ:ಬರದಲ್ಲೂ ಜಲಕ್ರಾಂತಿ: 'ಆಧುನಿಕ ಭಗೀರಥ' ಶಿವಾಜಿ ಕಾಗಣಿಕರ್​ ಪರಿಶ್ರಮಕ್ಕೆ ಭರಪೂರ ನೀರು - Belagavi Water Revolution

ABOUT THE AUTHOR

...view details