ಹಾಸನ :ಜಾನುವಾರುಗಳನ್ನು ಹುಡುಕಲು ಹೋಗಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿ ಸಾಯಿಸಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ಗುರುವಾರ (ಇಂದು) ಬೆಳಗ್ಗೆ ನಡೆದಿದೆ.
ಕನಗುಪ್ಪೆ ಗ್ರಾಮದ ದ್ಯಾವಮ್ಮ (60) ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಮಹಿಳೆ. ದ್ಯಾವಮ್ಮ ಬೆಳಗ್ಗೆ ಜಾನುವಾರುಗಳನ್ನು ಹುಡುಕಲು ಹೋಗಿದ್ದು, ಬಳಿಕ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಅವರು ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಹಿಳೆಯ ದೇಹದ ಮೇಲಿನ ಗಾಯದ ಗುರುತು ಮತ್ತು ಸ್ಥಳದಲ್ಲಿ ಆನೆಯ ಹೆಜ್ಜೆ ಗುರುತು ಕಂಡುಬಂದಿದೆ. ಕಾಡಾನೆ ದಾಳಿಯಿಂದಲೇ ದ್ಯಾವಮ್ಮ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆಯ ಶವ ಮನೆಯ ಸಮೀಪವೇ ಕಂಡುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅರೇಹಳ್ಳಿ ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳ ಮೇಲೆ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ವಾಗ್ವಾದ ನಡೆಸಿದರು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು.