ರಾಯಚೂರು:ವ್ಯಕ್ತಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಅನುಮಾನದ ಮೇಲೆಸಾರ್ವಜನಿಕವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದುರುಗಪ್ಪ ಎಂಬಾತನ ಸಾವಿಗೆ ಆತನ ಪರಿಚಯಸ್ಥ ಮಹಿಳೆಯೇ ಕಾರಣ ಎಂದು ಆರೋಪಿಸಿ ಆಕೆಯನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ. ಜನವರಿ 27ರಂದು ಸಂಜೆ ವೇಳೆಗೆ ಘಟನೆ ಜರುಗಿದೆ. ಈ ಬಗ್ಗೆ ಮಹಿಳೆಯು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾ ಎಂಬವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ದುರುಗಪ್ಪ ಮೃತಪಟ್ಟಿದ್ದ. ಮೃತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.