ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಇಂದು ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿತು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಒಕ್ಕೂಟದ ವಿದ್ಯಾರ್ಥಿ ಘಟಕದ ಸದಸ್ಯರು ಖಂಡಿಸಿ ಕನಕದಾಸ ವೃತ್ತದಿಂದ ಫ್ರೀಡಂಪಾರ್ಕ್ವರೆಗೂ ಪಂಜಿನ ಮೆರವಣಿಗೆ ಮಾಡಿದರು.
ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸಂರಕ್ಷಣೆಗಾಗಿ ನಿರಂತರವಾಗಿ ಚಳುವಳಿ ರೂಪಿಸುತ್ತಾ ಬರುತ್ತಿರುವ ಈ ಒಕ್ಕೂಟ ಈಗಾಗಲೇ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ರೀತಿಯ ಹೋರಾಟಗಳನ್ನು ನಿರಂತರವಾಗಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಪಿತೂರಿಯ ವಿರುದ್ಧ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಒಕ್ಕೂಟದ ಸಂಚಾಲಕ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ಸಂಚಾಲಕರುಗಳಾದ ಮಾವಳ್ಳಿ ಶಂಕರ್, ಅನಂತ ನಾಯ್ಡು ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.