ನವದೆಹಲಿ: ಸ್ವಾತಂತ್ರ್ಯದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಾಂಗ್ಲಾದೇಶ ಸಜ್ಜಾಗಿದೆ.ರಾಷ್ಟ್ರದ ಪಿತಾಮಹ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ ಸಹ ಇದೇ ಅವಧಿಯಲ್ಲಿ ಜರುಗುತ್ತಿದೆ.
ಶೇಖ್ ಮುಜಿಬುರ್ ರಹಮಾನ್ ಅವರಿಗೆ ಗಾಂಧಿ ಶಾಂತಿ ಪ್ರಶಸ್ತಿ 2020 ಪ್ರದಾನ ಮಾಡಿದ ಕೆಲವು ದಿನಗಳ ನಂತರ ಮೋದಿ ಬಾಂಗ್ಲಾದಲ್ಲಿ ನಡೆಯಲ್ಲಿರುವ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 26 ಮತ್ತು 27ರಂದು ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡಿದ ನಂತರದ ಮೊದಲ ವಿದೇಶ ಪ್ರವಾಸವಾಗಲಿದೆ. ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮೋದಿಯನ್ನು ಸ್ವಾಗತಿಸಲಿದ್ದಾರೆ.
ಇದನ್ನೂ ಓದಿ: ವಿದೇಶಗಳಿಗೆ ಭಾರತ ಕೊರೊನಾ ಲಸಿಕೆ ರಫ್ತಿಗೆ ಹಿನ್ನಡೆ: ಕಾರಣವಾದರೂ ಏನು?
ರಾಷ್ಟ್ರೀಯ ಪರೇಡ್ ಮೈದಾನ ಮತ್ತು ಬಂಗಬಂಧು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ 50ನೇ ವಿಮೋಚನಾ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಭಯ ರಾಷ್ಟ್ರಗಳು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ. ಎರಡು ದಿನಗಳ ಭೇಟಿಯ ಸಮಯದಲ್ಲಿ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಹೊಸ ಪ್ರಕಟಣೆಗಳನ್ನು ಹೊರಡಿಸಬಹುದು.
ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ, ಭಾರತ ಮತ್ತು ಬಾಂಗ್ಲಾದೇಶದ ನಡುವೆ ರಾಜತಾಂತ್ರಿಕ ಸಂಬಂಧ ಏರ್ಪಟ್ಟು 50 ವರ್ಷ ಪೂರೈಸಿದೆ ಮತ್ತು ಬಾಂಗ್ಲಾ ವಿಮೋಚನಾ ಯುದ್ಧ ನಡೆದು 50 ವರ್ಷಗಳಂತಹ ಮಹತ್ವದ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ.
ಮೋದಿಯವರ ಕಾರ್ಯಕ್ರಮವು ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ಹೊರತಾಗಿ, ಬಾಂಗ್ಲಾದೇಶದ ಅಧ್ಯಕ್ಷ ಎಂಡಿ ಅಬ್ದುಲ್ ಹಮೀದ್ ಹಾಗೂ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಅವರನ್ನೂ ಭೇಟಿ ಮಾಡಲಿದ್ದಾರೆ.