ಗುವಾಹಟಿ: ಎಫ್ಎಂಸಿಜಿ ಕ್ಲಸ್ಟರ್ ನಿರ್ಮಾಣದ ಕುರಿತು ಮಾಹಿತಿ ಪಡೆಯಲು ಹಾಗೂ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ ಆಗಮಿಸುವಂತೆ ಗುವಾಹಟಿಯ ಎಫ್ಎಂಸಿಜಿ ವಲಯದ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲು, ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗುವಾಹಟಿಯ ಎಫ್ಎಂಸಿಜಿ ವಲಯಕ್ಕೆ ಭೇಟಿ ನೀಡಿದ್ದಾರೆ.
ಫಿಕ್ಕಿಯ ಕರ್ನಾಟಕ ಚಾಪ್ಟರ್ ಹಾಗೂ ಇನ್ವೆಸ್ಟ್ ಕರ್ನಾಟಕ ಫೋರಂ ವತಿಯಿಂದ ಏರ್ಪಡಿಸಿದ್ದ, ಹೂಡಿಕೆದಾರರು ಮತ್ತು ಉದ್ಯಮಿಗಳ ಸಭೆಯಲ್ಲಿ ಗುವಾಹಟಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸದಸ್ಯರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ಇದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಹೂಡಿಕೆಗೆ ಅವಕಾಶವಿದೆ. ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಎಫ್ಎಂಸಿ ಜಿ ಕ್ಲಸ್ಟರ್ ಸ್ಥಾಪನೆಗೆ ಸರ್ಕಾರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ ಎಂದು ಕೈಗಾರಿಕೋದ್ಯಮಿಗಳಿಗೆ ಸಚಿವರು ವಿವರಿಸಿದರು.
ಇದೇ ವೇಳೆ ಸಚಿವ ಶೆಟ್ಟರ್ ಅವರು ಗುವಾಹಟಿಯಲ್ಲಿ ಉಜಾಲ ಘಟಕ, ಗೋದ್ರೇಜ್, ಮಾರ್ಗೋ ಸೇರಿದಂತೆ ಇನ್ನಿತರೆ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆಯನ್ನು ಅವಲೋಕಿಸಿದರು.