ಮುಂಬೈ : ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಕಾರಣ ಸಾವನ್ನಪ್ಪಿದರೆ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಗೆ ಸರ್ಕಾರ 50 ಲಕ್ಷ ರೂ.ಗಳ ಪರಿಹಾರ ಧನ ನೀಡಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಹಣಕಾಸು ಖಾತೆ ಸಚಿವರೂ ಆಗಿರುವ ಪವಾರ್, ಗೃಹ ಸಚಿವ ಅನಿಲ್ ದೇಶ್ಮುಖ್, ಆರೋಗ್ಯ ಸಚಿವ ರಾಜೇಶ್ ಟೊಪೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೊಲೀಸ್, ಸಾರ್ವಜನಿಕ ಆರೋಗ್ಯ, ವೈದ್ಯಕೀಯ ಶಿಕ್ಷಣ ಮತ್ತು ಇತರ ಇಲಾಖೆಗಳ ಸಿಬ್ಬಂದಿಗೆ ಆದ್ಯತೆಯ ಮೇರೆಗೆ ಉಳಿದ ಸಂಬಳವನ್ನು ನೀಡಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಸಾಂಕ್ರಾಮಿಕ ರೋಗದ ಆರ್ಥಿಕ ಪರಿಣಾಮಗಳನ್ನು ಪರಿಗಣಿಸಿ ಸರ್ಕಾರಿ ನೌಕರರ ವೇತನವನ್ನು ಎರಡು ಕಂತುಗಳಲ್ಲಿ ನೀಡಲಾಗುವುದು ಎಂದು ಸರ್ಕಾರ ಈ ಹಿಂದೆ ಘೋಷಿಸಿತ್ತು.