ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದಿರುವ ಗಲಭೆ, ಹಿಂಸಾಚಾರದ ಬಳಿಕ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಿಶೀಲನಾ ಸಭೆ ನಡೆಸಿದರು.
ಸಚಿವಾಲಯದ ಪ್ರಕಾರ, ಈಶಾನ್ಯ ದೆಹಲಿಯ ಯಾವುದೇ ಪೊಲೀಸ್ ಠಾಣೆಯಲ್ಲಿ ಕಳೆದ 36 ಗಂಟೆಗಳಲ್ಲಿ ಯಾವುದೇ ದೊಡ್ಡ ಅಹಿತಕರ ಘಟನೆಗಳು ವರದಿಯಾಗಿಲ್ಲ. ಫೆಬ್ರವರಿ 24ರಿಂದ ಈವರೆಗಿನ ಘಟನೆಗಳಲ್ಲಿ 35 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಕರ್ತವ್ಯದ ವೇಳೆ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, ಸುಮಾರು 70 ಪೊಲೀಸ್ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಯಾವುದೇ ವದಂತಿಗಳನ್ನು ನಂಬಬೇಡಿ ಮತ್ತು ಕೋಮು ಗಲಭೆ ಸೃಷ್ಟಿಸಲು ಮುಂದಾಗಿರುವ ದುಷ್ಕರ್ಮಿಗಳು ಮತ್ತು ಗುಂಪುಗಳಿಗೆ ಯಾರೂ ಬಲಿಯಾಗಬಾರದು ಎಂದು ಅಮಿತ್ ಶಾ ಜನತೆಗೆ ಮನವಿ ಮಾಡಿದ್ದಾರೆ.
ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಈಗಾಗಲೇ ರಸ್ತೆಗಳನ್ನು ಸ್ವಚ್ಛಗೊಳಿಸಲು ಮತ್ತು ಹಾನಿಗೊಳಗಾದ ಸಾರ್ವಜನಿಕ ಆಸ್ತಿಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಫೆಬ್ರವರಿ 24ರಿಂದ ಈಶಾನ್ಯ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಸುಮಾರು 7,000 ಕೇಂದ್ರ ಪ್ಯಾರಾ-ಮಿಲಿಟರಿ ಪಡೆಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೂರು ವಿಶೇಷ ಸಿಪಿಗಳು, ಆರು ಜಂಟಿ ಸಿಪಿಗಳು, ಒಂದು ಹೆಚ್ಚುವರಿ ಸಿಪಿ, 22 ಡಿಸಿಪಿಗಳು, 20 ಎಸಿಪಿಗಳು, 60 ಇನ್ಸ್ಪೆಕ್ಟರ್ಗಳು, 1,200 ಇತರೆ ತುಕಡಿಗಳು ಮತ್ತು 200 ಲೇಡಿ ಪೊಲೀಸರನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವುದಾಗಿ ಸಚಿವಾಲಯ ತಿಳಿಸಿದೆ.