ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸೌರವ್ ಗಂಗೂಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಹಿಂದೆ ಬಿಸಿಸಿಐ ಗಾದಿಗೆ ಮಾಜಿ ಹಿರಿಯ ಆಟಗಾರ ಬ್ರಿಜೇಶ್ ಪಟೇಲ್ ಅವರ ಹೆಸರು ಕೇಳಿಬಂದಿತ್ತು. ಆದರೆ ಅವರೀಗ ಐಪಿಎಲ್ ಚೇರ್ಮನ್ ಹುದ್ದೇಗೇರಲಿದ್ದು, ದಾದಾ ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನಡೆದ ಸಭೆಯ ಬಳಿಕ ದಿಢೀರ್ ಬೆಳವಣಿಗೆಯಲ್ಲಿ ಸೌರವ್ ಹೆಸರು ಮಂಚೂಣಿಯಲ್ಲಿ ಕೇಳಿಬಂದಿದೆ. ಅಲ್ಲದೆ ಗಂಗೂಲಿಗೆ ಐಪಿಎಲ್ ಅಧ್ಯಕ್ಷ ಹುದ್ದೆ ನೀಡಲು ನಿರ್ಧರಿಸಲಾಗಿತ್ತು. ಆದರೆ ದಾದಾ ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಅಧ್ಯಕ್ಷರಾಗಿರುವ 47 ವರ್ಷದ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಹುದ್ದೆಗೇರಿದರೆ ಅವರ ಅವಧಿಯು 2020ರ ಸೆಪ್ಟೆಂಬರ್ವರೆಗೆ ಇರಲಿದೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜೇ ಶಾ ಬಿಸಿಸಿಐನ ನೂತನ ಕಾರ್ಯದರ್ಶಿಯಾದರೆ, ಅರುಣ್ ಧುಮಾಲ್ ಹೊಸ ಖಜಾಂಚಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಅರುಣ್ ಧುಮಾಲ್ ಅವರು ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ಕಿರಿಯ ಸಹೋದರರಾಗಿದ್ದಾರೆ.
ಸೋಮವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಾಬಿ ನಡೆಯಬಹುದು, ಇಲ್ಲವೇ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.