ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆಯ್ಕೆಯಾಗಿದ್ದು, ಇದೇ ತಿಂಗಳ 28ರಂದು ಶಿವಾಜಿ ಪಾರ್ಕ್ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಚುನಾಯಿತರಾಗುತ್ತಿದ್ದಂತೆ ತಮ್ಮ ನಿವಾಸ ಮಾತೋಶ್ರಿಯಲ್ಲಿ ಪಕ್ಷದ ಸಂಸ್ಥಾಪಕ ಮತ್ತು ತಂದೆ ಬಾಳಾಸಾಹೇಬ್ ಠಾಕ್ರೆ ಫೋಟೋ ಎದುರು ತಲೆಬಾಗಿ ನಮಸ್ಕರಿಸಿ ಗೌರವ ಸಲ್ಲಿಕೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿರುವ ಅವರು ಮಹಾರಾಷ್ಟ್ರದ ಸಿಎಂ ಆಗುತ್ತೇನೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಈಗ ಆ ಅವಕಾಶ ಒದಗಿ ಬಂದಿದ್ದು ಸಧೃಡ ಆಡಳಿತ ನೀಡುವೆ ಎಂದಿದ್ದಾರೆ. ಇದೇ ವೇಳೆ ತಮ್ಮ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೂ ಆಹ್ವಾನ ನೀಡುವುದಾಗಿ ಹೇಳಿದ್ದಾರೆ.
ಕಳೆದ ಒಂದು ತಿಂಗಳಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ, ದೇವೇಂದ್ರ ಫಡ್ನವೀಸ್ ದಿಢೀರ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಹೊಸ ರೂಪ ಪಡೆದುಕೊಂಡಿತ್ತು. ಇದಾದ ಬಳಿಕ ಸುಪ್ರೀಂಕೋರ್ಟ್ ಬಹುಮತ ಸಾಬೀತು ಮಾಡಲು ಹೇಳಿದ್ದರಿಂದ ಅದರಲ್ಲಿ ವಿಫಲಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಶಿವಸೇನೆ+ಎನ್ಸಿಪಿ+ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಮಾಡಲು ಮುಂದಾಗಿವೆ.