ನವದೆಹಲಿ: ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರದ ಬೆನ್ನಲ್ಲೇ ದೆಹಲಿ ಪೊಲೀಸರೀಗ ಖಲಿಸ್ತಾನ್ ಸಂಬಂಧಿತ ಟ್ವಿಟರ್ ಖಾತೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಈಗಾಗಲೇ ಹಿಂಸಾಚಾರ ಕುರಿತು ದ್ವೇಷಪೂರಿತ ಮಾಹಿತಿ ಹಂಚಿಕೊಳ್ಳುತ್ತಿದ್ದ ಸುಮಾರು 550ಕ್ಕೂ ಹೆಚ್ಚು ಖಾತೆಗಳನ್ನು ಟ್ವಿಟರ್ ಸ್ಥಗಿತಗೊಳಿಸಿದೆ. ಈ ಸಂಬಂಧ ತನಿಖೆ ಕೈಗೊಂಡಿರುವ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಮಾಡಿರುವ ಇಂತಹ ಮತ್ತಷ್ಟು ಖಾತೆಗಳನ್ನು ಹುಡುಕುತ್ತಿದ್ದಾರೆ.
ಈ ಹಿಂಸಾತ್ಮಕ ರ್ಯಾಲಿ ಹಿಂದೆ ಖಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರರ ಕೈವಾಡವೂ ಇದೆ ಎಂಬ ಆರೋಪಗಳು ಕೇಳಿಬಂದಿದ್ದು, ಖಲಿಸ್ತಾನ್ ಸಂಬಂಧಿತ ಟ್ವಿಟರ್ ಖಾತೆಗಳ ಮೇಲೆ ದೆಹಲಿ ಪೊಲೀಸರು ದೃಷ್ಟಿ ಹಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೆಹಲಿಯ ಹಿಂಸಾಚಾರ.. 550ಕ್ಕೂ ಹೆಚ್ಚು ಟ್ವಿಟರ್ ಖಾತೆಗಳು ಅಮಾನತು..
ಜನವರಿ 26ರಂದು ನಡೆದಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್ ಸಿಬ್ಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಸಂಬಂಧ ಈವರೆಗೆ 19 ಮಂದಿಯನ್ನು ಅರೆಸ್ಟ್ ಮಾಡಲಾಗಿದ್ದು, 50 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್, ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಸೇರಿ 37 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.